Publish Date: Sat, 16 Mar 2019 (16:26 IST)
Updated Date: Sat, 16 Mar 2019 (16:32 IST)
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಗೆಲುವು ಸಾಧಿಸಲೇಬೇಕು ಎಂದು ಕಾಂಗ್ರೆಸ್ - ಜೆಡಿಎಸ್ ಪಣ ತೊಟ್ಟಿವೆ. ಕ್ಷೇತ್ರದ ಚುನಾವಣಾ ಉಸ್ತುವಾರಿಯನ್ನು ಕಾಂಗ್ರೆಸ್ ನ ಚಾಣಕ್ಯ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಅವರ ಹೆಗಲಿಗೆ ವಹಿಸಲಾಗಿದೆ ಎಂಬ ಮಾತು ಇದೀಗ ಕೇಳಿ ಬರುತ್ತಿದೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಬಿ.ಎಸ್.ಯಡಿಯೂರಪ್ಪನವರ ಪುತ್ರ ಬಿ.ವೈ.ರಾಘವೇಂದ್ರ ಈ ಬಾರಿಯ ಚುನಾವಣೆಯಲ್ಲಿಯೂ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಇನ್ನು ಕಾಂಗ್ರೆಸ್ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದು, ಮೈತ್ರಿ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಕಣಕ್ಕಿಳಿಯುವುದು ಫೈನಲ್ ಆಗಿದೆ. 2018ರ ನವೆಂಬರ್ ನಲ್ಲಿ ನಡೆದ ಉಪ ಚುನಾವಣೆಯಲ್ಲಿಯೂ ಕೂಡ, ಮಧು ಬಂಗಾರಪ್ಪ ಮತ್ತು ಬಿ.ವೈ.ರಾಘವೇಂದ್ರ ಮುಖಾಮುಖಿಯಾಗಿದ್ದರು.
ಬಿ.ವೈ.ರಾಘವೇಂದ್ರ ಅವರಿಗೆ ಪ್ರಬಲ ಪೈಪೋಟಿ ನೀಡಿದ್ದ ಮಧು ಬಂಗಾರಪ್ಪ ಅವರು ಕೇವಲ 52,148 ಮತಗಳ ಅಂತರದಿಂದ ಸೋಲು ಕಂಡಿದ್ದರು. ಈ ಹಿನ್ನೆಲೆಯಲ್ಲಿಯೇ ಮತ್ತೆ ಮಧು ಬಂಗಾರಪ್ಪರಿಗೆ ಚುನಾವಣೆಗೆ ನಿಲ್ಲಿಸಲಾಗಿದ್ದು, ಈ ಬಾರಿ ಗೆಲ್ಲುವ ವಿಶ್ವಾಸವನ್ನು ಅವರು ಹೊಂದಿದ್ದಾರೆ.
ಅಲ್ಲದೇ, ಈ ಬಾರಿ ಬಿ.ವೈ.ರಾಘವೇಂದ್ರ ಅವರನ್ನು ಕಟ್ಟಿ ಹಾಕುವ ಮೂಲಕ ಯಡಿಯೂರಪ್ಪ ಅವರಿಗೆ ಮುಖಭಂಗ ಉಂಟು ಮಾಡಬೇಕೆನ್ನುವುದೇ, ಕಾಂಗ್ರೆಸ್-ಜೆಡಿಎಸ್ ತಂತ್ರವಾಗಿದೆ. ಇದಕ್ಕಾಗಿಯೇ ಇದೀಗ ಡಿ.ಕೆ. ಶಿವಕುಮಾರ್ ಗೆ ಉಸ್ತುವಾರಿ ನೀಡಲು ಯೋಜಿಸಲಾಗಿದೆ.