Publish Date: Fri, 29 Nov 2024 (13:38 IST)
Updated Date: Fri, 29 Nov 2024 (13:41 IST)
ನವದೆಹಲಿ: ಹಾಸನದಲ್ಲಿ ನಡೆಲುದ್ದೇಶಿಸಿರುವ ಸಿಎಂ ಸಿದ್ದರಾಮಯ್ಯನವರ ಸ್ವಾಭಿಮಾನಿ ಜನಾಂದೋಲನ ಸಮಾವೇಶದ ಬಗ್ಗೆ ಎಐಸಿಸಿಗೆ ಅಸಮಾಧಾನವಿದೆ, ಪಕ್ಷದೊಳಗೇ ಈ ಸಮಾವೇಶಕ್ಕೆ ವಿರೋಧವಿದೆ ಎಂಬ ವರದಿಗಳ ಬಗ್ಗೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಸಾಧನ ಸಮಾವೇಶವು ಸಿದ್ದರಾಮಯ್ಯ ಅವರ ಸಮಾವೇಶವಾಗಿ ಬದಲಾಗಿದೆ ಎನ್ನುವ ಕುರಿತು ಅಸಮಾಧಾನ ಹೊಂದಿರುವ ಪತ್ರವು ಎಐಸಿಸಿಗೆ ಬಂದಿದೆ ಎನ್ನುವ ಬಗ್ಗೆ ಕೇಳಿದಾಗ, "ನನಗೆ ಇದರ ಬಗ್ಗೆ ಮಾಹಿತಿಯಿಲ್ಲ. ಆದರೆ, ಸಮಾವೇಶವನ್ನು ಯಾವ ಕಾರಣಕ್ಕೆ ಮಾಡಲಾಗುತ್ತಿದೆ ಎನ್ನುವುದರ ಬಗ್ಗೆ ಮುಖ್ಯಮಂತ್ರಿಗಳು ನನಗೆ ಮೊದಲೇ ತಿಳಿಸಿದ್ದಾರೆ. ಮಿಕ್ಕ ವಿಚಾರಗಳು ನನಗೆ ಗೊತ್ತಿಲ್ಲ. ಏಕೆಂದರೆ ಮುಖ್ಯಮಂತ್ರಿಗಳು ಹಾಗೂ ನಾನು ಭೇಟಿ ಮಾಡಿ ಮೂರು ನಾಲ್ಕು ದಿನಗಳಾಗಿವೆ. ಪಕ್ಷದ ಭಾಗವಹಿಸುವಿಕೆ ಖಂಡಿತ ಇದ್ದೆ ಇರುತ್ತದೆ" ಎಂದರು.
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಯ ಬಗ್ಗೆ ಕೇಳಿದಾಗ, "ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಅಧಿವೇಶನದಲ್ಲಿ ಪಕ್ಷದ ಅಧ್ಯಕ್ಷರಾಗಿ ಮಹಾತ್ಮಾ ಗಾಂಧಿಯವರು ಅಧಿಕಾರವಹಿಸಿಕೊಂಡು ನೂರು ವರ್ಷಗಳಾಗಿದೆ. ಈ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಲು ಅವರನ್ನು ಭೇಟಿಯಾಗಿದ್ದೆ.
ಡಿಸೆಂಬರ್ 28 ರಂದೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ. ಆದ ಕಾರಣ ಈ ಹಿಂದೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳ ಬಳಿ ಕಾರ್ಯಕ್ರಮದ ಬಗ್ಗೆ ಚರ್ಚೆ ನಡೆಸಿ ತೆಗೆದುಕೊಂಡ ಸಲಹೆ, ಸೂಚನೆಗಳನ್ನು ಮಲ್ಲಿಕಾರ್ಜುನ ಖರ್ಗೆ ಅವರ ಬಳಿ ಚರ್ಚೆ ಮಾಡಿದೆ. ಸುಮಾರು 300 ಕ್ಕೂ ಹೆಚ್ಚು ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ನಾವು ಈ ಕಾರ್ಯಕ್ರಮ ಕರ್ನಾಟಕದಲ್ಲಿ ನಡೆಯಬೇಕು ಎನ್ನುವ ಅಭಿಲಾಷೆಯನ್ನು ಹೊಂದಿದ್ದೇವೆ. ಈ ಬಗ್ಗೆ ಪಕ್ಷದ ಕಾರ್ಯಕಾರಿ ಸಭೆಯಲ್ಲಿ ಚರ್ಚಿಸಿ ತಿಳಿಸುವುದಾಗಿ ಅವರು ಹೇಳಿದ್ದಾರೆ. ನಾನು ಮತ್ತು ಮುಖ್ಯಮಂತ್ರಿ ಇಬ್ಬರು ಒಟ್ಟಿಗೆ ಈ ಬಗ್ಗೆ ಚರ್ಚೆ ಮಾಡಿದ್ದೇವೆ" ಎಂದರು.