Publish Date: Tue, 14 Apr 2026 (14:01 IST)
Updated Date: Tue, 14 Apr 2026 (14:06 IST)
ಬೆಂಗಳೂರು: ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿರುತ್ತಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಸದಾಶಿವನಗರದ ತಮ್ಮ ನಿವಾಸ ಹಾಗೂ ಕೆಪಿಸಿಸಿ ಕಚೇರಿ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.
ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ನಸೀರ್ ಅಹ್ಮದ್ ಬಿಡುಗಡೆ ಮಾಡಿ ಮುಖ್ಯಮಂತ್ರಿಗಳು ಆದೇಶ ಹೊರಡಿಸಿರುವ ಬಗ್ಗೆ ಕೇಳಿದಾಗ, “ನಜೀರ್ ಅವರಿಗೆ ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರಕ್ಕೆ ಹೋಗಿ ಬಂಡಾಯ ಅಭ್ಯರ್ಥಿ ಹಿಂದೆ ಸರಿಯುವಂತೆ ಮಾಡಲು ಪಕ್ಷ ಸೂಚಿಸಿತ್ತು. ಅವರು ಈ ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ. ಅಲ್ಲಿ ಏನಾಗಿದೆ ಎಂದು ನನಗೆ ಇನ್ನು ವರದಿ ಬರಬೇಕಿದೆ” ಎಂದರು.
ಪಕ್ಷದಲ್ಲಿ ಶಿಸ್ತು ಮುಖ್ಯ
ಪಕ್ಷ ವಿರೋಧಿ ಚಟುವಟಿಕೆ ಮಾಡುವವರಿಗೆ ಇದು ಸಂದೇಶವೇ ಎಂದು ಕೇಳಿದಾಗ, “ಯಾವುದೇ ಪಕ್ಷವಾದರೂ ಶಿಸ್ತು ಬಹಳ ಮುಖ್ಯ. ಎಲ್ಲರನ್ನು ವಿಶ್ವಾಸಕ್ಕೆ ಪಡೆದುಕೊಂಡೇ ಅಭ್ಯರ್ಥಿ ಆಯ್ಕೆ ಮಾಡಿದ್ದೆವು. ನಂತರ ನಾವು ಎಲ್ಲಾ ನಾಯಕರೊಂದಿಗೆ ನಿತ್ಯ ಸಂಪರ್ಕದಲ್ಲಿದ್ದೆವು. ನಮ್ಮ ನಾಯಕರ ವರದಿಗಳ ಆಧಾರದ ಮೇಲೆ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಂಡಿದ್ದಾರೆ” ಎಂದರು.
ಜಮೀರ್ ಅವರ ವಿರುದ್ಧವೂ ಶಿಸ್ತು ಕ್ರಮ ಜರುಗಿಸಲಾಗುವುದೇ ಎಂದು ಕೇಳಿದಾಗ, “ಇದರ ಬಗ್ಗೆ ನನಗೆ ಮಾಹಿತಿ ಇಲ್ಲ”ಎಂದರು.
ಚೆನ್ನೈಗೆ ಮತ್ತೆ ಪ್ರಯಾಣ ಮಾಡುತ್ತೀರಾ ಎಂದು ಕೇಳಿದಾಗ, “ಇಂದು ರಾತ್ರಿ ಚೆನ್ನೈಗೆ ಪ್ರಯಾಣ ಮಾಡುತ್ತಿದ್ದು, ಬುಧವಾರ ಚುನಾವಣಾ ಪ್ರಚಾರ ಕಾರ್ಯಕ್ರಮವಿದೆ” ಎಂದರು.
ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆ ಬಗ್ಗೆ ಶಾಸಕರೊಂದಿಗೆ ಚರ್ಚೆ
ನೀವು ಶಾಸಕರನ್ನು ಒಬ್ಬೊಬ್ಬರನ್ನೇ ಕರೆದು ಚರ್ಚೆ ಮಾಡುತ್ತಿದ್ದೀರಿ ಎಂಬ ಚರ್ಚೆ ಬಗ್ಗೆ ಕೇಳಿದಾಗ, “ರಾಜಕಾರಣ ಮಾಡುವಾಗ ನಾವು ನಮ್ಮ ಶಾಸಕರ ಜತೆ ಚರ್ಚೆ ಮಾಡಿ ಭವಿಷ್ಯ ರೂಪಿಸುವ ಬಗ್ಗೆ ಚರ್ಚೆ ಮಾಡಬೇಕಲ್ಲವೇ. ಯಾರಿಗೆ ಏನು ಹೇಳಬೇಕು, ಯಾರಿಗೆ ಯಾವ ಮಾರ್ಗದರ್ಶನ ನೀಡಬೇಕು ಮಾಡುತ್ತೇವೆ. ಪಾಲಿಕೆ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ಚರ್ಚೆ ಮಾಡುವುದು ಪಕ್ಷದ ಅಧ್ಯಕ್ಷನಾಗಿ ನನ್ನ ಕರ್ತವ್ಯ. ಈ ಕೆಲಸ ನಾನು ಮಾಡದೇ ಬೇರೆ ಯಾರು ಮಾಡುತ್ತಾರೆ? ಇನ್ನು ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಏನಾಗಿದೆ ಎಂದು ಶಾಸಕರು ವರದಿ ನೀಡುತ್ತಿದ್ದಾರೆ” ಎಂದು ತಿಳಿಸಿದರು.
ಎಚ್ಚರವಾಗಿರಲು ಶಾಸಕರಿಗೆ ಸಲಹೆ
ಶಾಸಕರಿಗೆ ನೇರವಾಗಿ ಎಚ್ಚರಿಕೆ ನೀಡಿರುವ ಬಗ್ಗೆ ಕೇಳಿದಾಗ, “ಶಾಸಕರು ದೆಹಲಿಗೆ ಹೋಗಿರುವುದು, ಮಂತ್ರಿ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ. ಅವರು ತಮ್ಮ ಬೇಡಿಕೆ ಕೇಳಲಿ. ಆದರೆ ಪಕ್ಷಕ್ಕೆ ಶಿಸ್ತಿನಿಂದ ಇರಬೇಕು ಅಷ್ಟೇ. ಅವರೆಲ್ಲರೂ ನಮ್ಮ ಸಹೋದ್ಯೋಗಿಗಳು. ಹೀಗಾಗಿ ಅವರಿಗೆ ಶಿಸ್ತು ಕಾಪಾಡುವಂತೆ ಮನವಿ ಮಾಡಿದ್ದೇನೆ. ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡುವಾಗ ಎಚ್ಚರಿಕೆಯಿಂದ ಇರಿ ಎಂದು ಸಲಹೆ ನೀಡಿದ್ದೇನೆ” ಎಂದರು.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ