Publish Date: Wed, 02 Jul 2025 (15:02 IST)
Updated Date: Wed, 02 Jul 2025 (15:04 IST)
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚಗಳಾಗುತ್ತಿರುವಾಗಲೇ ನನಗೆ ಸಿದ್ದರಾಮಯ್ಯನವರನ್ನು ಬೆಂಬಲಿಸದೇ ಬೇರೆ ದಾರಿಯಿಲ್ಲ ಎಂದು ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಐದು ವರ್ಷ ನಾನೇ ಸಿಎಂ ಎಂದಿದ್ದಾರೆ. ಸಿದ್ದರಾಮಯ್ಯ ಹೇಳಿಕೆಗೆ ಸಂಬಂಧಿಸಿದಂತೆ ನಂದಿಬೆಟ್ಟದಲ್ಲಿ ಇಂದು ವಿಶೇಷ ಸಂಪುಟ ಸಭೆಗೆ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಡಿಕೆ ಶಿವಕುಮಾರ್ ನಮಗೆ ಬೇರೆ ಆಯ್ಕೆಗಳಿಲ್ಲ. ಸಿದ್ದರಾಮಯ್ಯನವರನ್ನು ಬೆಂಬಲಿಸಲೇಬೇಕು. ಸಿದ್ದರಾಮಯ್ಯ ಬೆನ್ನಿಗೆ ನಿಂತು ಸಹಕಾರ ಕೊಡುತ್ತೇನೆ. ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದಿದ್ದಾರೆ.
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಅಪಸ್ವರ ತೆಗೆಯುವುದು ಬೇಡ ಎಂದು ಅವರು ಈ ವೇಳೆ ತಮ್ಮ ಬೆಂಬಲಿಗರಿಗೂ ಮನವಿ ಮಾಡಿದ್ದಾರೆ. ಈಗಾಗಲೇ ಡಿಕೆಶಿ ಆಪ್ತ ಶಾಸಕ ಇಕ್ಬಾಲ್ ಹುಸೇನ್ ಮುಖ್ಯಮಂತ್ರಿ ಬದಲಾವಣೆಯಾಗಬೇಕು ಎಂದಿದ್ದು ಚರ್ಚೆಗೆ ಗ್ರಾಸವಾಗಿದೆ.
ಸಿದ್ದರಾಮಯ್ಯ ಐದು ವರ್ಷ ನಾನೇ ಸಿಎಂ ಎಂದ ಬೆನ್ನಲ್ಲೇ ಡಿಕೆಶಿ ಇಂತಹದ್ದೊಂದು ಹೇಳಿಕೆ ನೀಡಿರುವುದು ಈಗ ಚರ್ಚೆಗೆ ಕಾರಣವಾಗಿದೆ. ಹಾಗಿದ್ದರೆ ಡಿಕೆ ಶಿವಕುಮಾರ್ ಕೂಡಾ ಹತಾಶರಾಗಿದ್ದಾರೆಯೇ ಎಂದು ಪ್ರಶ್ನೆ ಮೂಡಿದೆ.