Publish Date: Fri, 23 Aug 2024 (14:20 IST)
Updated Date: Fri, 23 Aug 2024 (14:24 IST)
ನವದೆಹಲಿ: ಸಿದ್ದರಾಮಯ್ಯನವರ ವಿರುದ್ಧ ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನಲೆಯಲ್ಲಿ ಇಂದು ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಹೈಕಮಾಂಡ್ ಬೆಂಬಲ ಕೋರಲಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ಮುಡಾ ತನಿಖೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ನಾಯಕರು ಸಿಎಂ ಬೆನ್ನಿಗೆ ನಿಂತಿದ್ದಾರೆ. ಇದರ ನಡುವೆ ಹೈಕಮಾಂಡ್ ಗೆ ಘಟನೆ ಬಗ್ಗೆ ವಿವರಣೆ ನೀಡಲು ಇಂದು ಸಿದ್ದರಾಮಯ್ಯ ಮತ್ತು ಡಿಕೆಶಿ ದೆಹಲಿಗೆ ತೆರಳಿದ್ದಾರೆ. ಅಲ್ಲದೆ, ಇಂಡಿಯಾ ಒಕ್ಕೂಟದ ಬೆಂಬಲವನ್ನು ಪಡೆಯಲು ಹೈಕಮಾಂಡ್ ಮನವೊಲಿಸಲು ಮುಂದಾಗಿದ್ದಾರೆ.
ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ನಾಯಕರು ರಾಷ್ಟ್ರಪತಿಗೆ ದೂರು ನೀಡಲಿದ್ದಾರೆ ಎಂಬ ಸುದ್ದಿಗಳಿತ್ತು. ಈ ಬಗ್ಗೆ ಪ್ರಶ್ನಿಸಿದಾಗ ಡಿಕೆ ಶಿವಕುಮಾರ್ ನಮಗೆ ರಾಷ್ಟ್ರಪತಿಗಳ ಮೇಲೂ ನಂಬಿಕೆಯಿಲ್ಲ ಎಂಬ ರೀತಿ ಮಾತನಾಡಿದ್ದಾರೆ. ನಾವು ಹೋರಾಟ ಮುಂದುವರಿಸುತ್ತೇವೆ ಎಂದಿದ್ದಾರೆ.
ರಾಜ್ಯಪಾಲರ ಕಚೇರಿಯನ್ನು ಬಿಜೆಪಿ ದುರುಪಯೋಗಪಡಿಸಿಕೊಳ್ಳುತ್ತಿದೆ. ಬಿಜೆಪಿಯವರ ಮಾತು ಕೇಳಿ ರಾಜ್ಯಪಾಲರು ಅನುಮೋದನೆಗೆ ಕಳುಹಿಸಿದ್ದ 15 ಮಸೂದೆಗಳನ್ನು ವಾಪಸ್ ಕಳುಹಿಸಿದ್ದಾರೆ. ಈಗ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿದ್ದಾರೆ. ರಾಜ್ಯಪಾಲರ ಬಗ್ಗೆ ರಾಷ್ಟ್ರಪತಿಯವರಿಗೆ ದೂರು ಕೊಟ್ಟರೂ ಏನೂ ಆಗದು ಎಂದು ನಮಗೆ ಗೊತ್ತಿದೆ. ಹಾಗಾಗಿ ನಾವು ಹೇಗೆ ಹೋರಾಟ ಮಾಡಬೇಕೆಂದು ಯೋಜನೆ ರೂಪಿಸಿಕೊಂಡಿದ್ದೇವೆ ಎಂದಿದ್ದಾರೆ.