Publish Date: Wed, 13 Mar 2024 (15:59 IST)
Updated Date: Wed, 13 Mar 2024 (16:12 IST)
ಬೆಂಗಳೂರು: ಜಯದೇವ ಮಾಜಿ ನಿರ್ದೇಶಕ ಡಾ ಸಿಎನ್ ಮಂಜುನಾಥ್ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ. ನಾಳೆಯೇ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ.
ಮುಂಬರುವ ಲೋಕಸಭೆ ಚುನಾವಣೆಗೆ ಡಾ ಮಂಜುನಾಥ್ ಅವರನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ-ಜೆಡಿಎಸ್ ಮೈತ್ರಿಕೂಟ ತಯಾರಿ ನಡೆಸಿದೆ. ಇದಕ್ಕೆ ಈಗಾಗಲೇ ಡಾ ಮಂಜುನಾಥ್ ಮನವೊಲಿಸಲಾಗಿದೆ. ಅವರೂ ಕೂಡಾ ಒಪ್ಪಿದ್ದಾರೆ ಎನ್ನಲಾಗಿದೆ.
ಇದೇ ಕಾರಣಕ್ಕೆ ನಾಳೆ ಅಧಿಕೃತವಾಗಿ ಮಂಜುನಾಥ್ ಅವರನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳಿಸಲಾಗುತ್ತಿದೆ. ನಾಳೆ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಂಜುನಾಥ್ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಗುತ್ತದೆ. ಅದಕ್ಕೆ ಪೂರ್ವಭಾವಿಯಾಗಿ ಇಂದು ಸಂಜೆ ಬಿಎಸ್ ಯಡಿಯೂರಪ್ಪ ನೇರವಾಗಿ ಮಂಜುನಾಥ್ ಅವರನ್ನು ಭೇಟಿಯಾಗಿ ಮಾತನಾಡಲಿದ್ದಾರೆ.
ನಾಳೆಯ ಕಾರ್ಯಕ್ರಮಕ್ಕೆ ಯಡಿಯೂರಪ್ಪ, ಬಿವೈ ವಿಜಯೇಂದ್ರ, ಆರ್.ಅಶೋಕ್ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಉಪಸ್ಥಿತರಿದ್ದು ಮಂಜುನಾಥ್ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಿದ್ದಾರೆ. ಮಂಜುನಾಥ್ ಪಕ್ಷ ಸೇರ್ಪಡೆಯಾಗಬೇಕೆಂಬುದು ಬಿಜೆಪಿ ಹೈಕಮಾಂಡ್ ಒತ್ತಾಸೆಯೂ ಆಗಿದೆ.