ಮೈಸೂರು: ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾದ ಹೇಳಿಕೆ ಸಂಬಂಧ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಅವರು ಇನ್ನೂ ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ ಎಂದರು.
ಈ ವಿಚಾರವಾಗಿ ಇಂದು ಮಾಧ್ಯಮದವರಲ್ಲಿ ಮಾತನಾಡಿ, ನನ್ನ ಹೇಳಿಕೆಯನ್ನು ಬೇರೆ ಬೇರೆ ರೀತಿ ಬಿಂಬಿಸುತ್ತಿದ್ದಾರೆ. ನಾನು ಏನು ಹೇಳಬೇಕೋ ಅದನ್ನು ಹೇಳಿಯಾಗಿದೆ. ಇದೀಗ ಅದೇ ವಿಚಾರವಾಗಿ ವಿವಾದ ಸೃಷ್ಟಿ ಮಾಡುವುದು ಸರಿಯಲ್ಲ. ಮಾಧ್ಯಮದ ಮುಂದೆ ಮತ್ತೆ ಏನೂ ಮಾತನಾಡುವುದಿಲ್ಲ. ಈ ವಿಚಾರದ ಬಗ್ಗೆ ಎಲ್ಲಿ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ. ಪಕ್ಷದ ಆಂತರಿಕ ವಿಚಾರಗಳನ್ನು ಪಕ್ಷದ ಒಳಗೆ ಮಾತನಾಡುತ್ತೇನೆ ಎಂದು ಹೇಳಿದರು.
ನನ್ನ ಹೇಳಿಕೆ ಸಂಬಂಧ ಪಕ್ಷದಿಂದ ನೋಟಿಸ್ ವಿಚಾರವಾಗಿ ನೋಡಿಕೊಳ್ಳೋಣ ಬಿಡಿ. ಪಕ್ಷ ನನಗೆ ನೋಟಿಸ್ ಕೊಟ್ಟರೆ ಸೂಕ್ತ ಉತ್ತರ ಕೊಡುತ್ತೇನೆ ಎಂದು ಪ್ರತಿಕ್ರಿಯಿಸಿದರು.
ಈಗಿನ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯನವರೇ ಐದು ವರ್ಷ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತಾರೆ. ನವೆಂಬರ್ ಕ್ರಾಂತಿ, ಡಿಸೆಂಬರ್ ಕ್ರಾಂತಿ ಯಾವುದೂ ಇಲ್ಲ. ಕೇವಲ ಊಹಾಪೋಹ ಅಷ್ಟೇ ಎಂದರು.