ಮಂಗಳೂರು ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಬೇರೆ ಪ್ರಕರಣದಲ್ಲಿ ತಕ್ಷಣವೇ ಎಫ್ಐಆರ್ ದಾಖಲಿಸಿ ಬಂಧಿಸುತ್ತಾರೆ. ಅದೇ ರೀತಿ ಈ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಬೇಕು. ಆರೋಪ ಸಾಬೀತಾಗುವವರೆಗೂ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯ ಸರಕಾರ ದರೋಡೆಕೋರರ ಪರವಾಗಿದ್ದು, ಲೂಟಿ ಹೊಡೆಯುವವರೆಗೆ ರಕ್ಷಣೆ ನೀಡುತ್ತಿದೆ. ರಾಜ್ಯ ಪೊಲೀಸ್ ಇಲಾಖೆಯನ್ನು ದರೋಡೆ ಮಾಡಲು ಬಳಸಿಕೊಳ್ಳಲಾಗುತ್ತಿದೆ ಎಂದು ಸರಕಾರದ ವಿರುದ್ಧ ಗುಡುಗಿದ್ದಾರೆ.
ಡಿವೈಎಸ್ಪಿ ಗಣಪತಿ ಬರೆದಿರುವ ಡೆತ್ ನೋಟ್ನಲ್ಲಿ ಯಾರು ಹೆಸರನ್ನು ಉಲ್ಲೇಖಿಸಿದ್ದಾರೊ ಅವರು ಕುರಿತು ಮಾಹಿತಿ ಸಂಗ್ರಹಿಸುತ್ತೇನೆ. ರಾಜ್ಯ ಸರಕಾರ ಡಿವೈಎಸ್ಪಿ ಗಣಪತಿ ಬರೆದಿರುವ ಡೆತ್ ನೋಟ್ನ್ನು ಸಹ ಅವರೊಂದಿಗೆ ಸಮಾಧಿ ಮಾಡುತ್ತದೆ ಎಂದು ಲೇವಡಿ ಮಾಡಿದ್ದಾರೆ.
ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುವುದು ಸರಿಯಲ್ಲ. ಬದಲಾಗಿ, ಸರಕಾರದ ವಿರುದ್ಧ ದಿಟ್ಟ ನಿಲುವು ತೆಗೆದುಕೊಳ್ಳಬೇಕು. ಇಲ್ಲಿಯವರೆಗೂ ರೈತರು ಮಾತ್ರ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು. ಆದರೆ, ಇದೀಗ ಸರಕಾರಿ ಆಧಿಕಾರಿಗಳು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ರಾಜ್ಯ ಸರಕಾರ ಎಲ್ಲಾ ಭಾಗ್ಯಗಳ ಜೊತೆಗೆ ಆತ್ಮಹತ್ಯೆ ಭಾಗ್ಯವನ್ನು ನೀಡಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.