Publish Date: Fri, 06 Sep 2024 (15:45 IST)
Updated Date: Fri, 06 Sep 2024 (15:49 IST)
ಸಕಲೇಶಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ- 1ಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಾಗಿನ ಅರ್ಪಿಸಲು ಇಲ್ಲಿ ನಿರ್ಮಿಸಲಾಗಿದ್ದ ಮಂಟಪವು ಕಾರ್ಯಕ್ರಮ ಆರಂಭಕ್ಕೂ ಮುನ್ನಾ ಕುಸಿದು ಬಿದ್ದಿದೆ.
ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಮಧ್ಯಾಹ್ನ 12ಕ್ಕೆ ಚಾಲನೆ ನೀಡಿದ ಬಳಿಕ ಹೆಬ್ಬನಹಳ್ಳಿಯಲ್ಲಿ ಬಾಗಿನ ಅರ್ಪಿಸುವ ಕಾರ್ಯಕ್ರಮ ನಿಗದಿಯಾಗಿತ್ತು. ಅದಕ್ಕಾಗಿ ಹೂವು, ತಳಿರು ತೋರಣಗಳಿಂದ ಅಲಂಕೃತ ಮಂಟಪ ನಿರ್ಮಿಸಲಾಗಿತ್ತು.
ಆದರೆ ಕಾರ್ಯಕ್ರಮ ಆರಂಭಕ್ಕೂ ಮುನ್ನಾ ಶುಕ್ರವಾರ 11.15ರ ಹೊತ್ತಿಗೆ ಮಂಟಪ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಬರಪೀಡಿತ 29 ತಾಲ್ಲೂಕುಗಳಿಗೆ ಕುಡಿಯುವ ನೀರು ಒದಗಿಸುವ ಮಹತ್ವದ ಯೋಜನೆಯ ಉದ್ಘಾಟನೆ ಮುನ್ನ ಈ ರೀತಿ ಆಗಿರುವುದು ಅಧಿಕಾರಿಗಳಿಗೆ, ಜನಪ್ರತಿನಿದಿಗಳಿಗೆ ಬೇಸರ ಉಂಟು ಮಾಡಿದೆ.