Publish Date: Mon, 20 Mar 2023 (09:26 IST)
Updated Date: Mon, 20 Mar 2023 (10:10 IST)
ಕೋಲಾರ : ಕೋಲಾರ ಸ್ಪರ್ಧೆಯಿಂದ ಮಾಜಿ ಸಿಎಂ ಸಿದ್ದರಾಮಯ್ಯ ಹಿಂದೆ ಸರಿಯುವ ಸೂಚನೆ ನೀಡಿರುವ ಹಿನ್ನಲೆಯಲ್ಲಿ, ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕೋಲಾರದಲ್ಲಿ ಸಿದ್ದು ಬದಲಿಗೆ ಕಾಂಗ್ರೆಸ್ನಿಂದ ಅಭ್ಯರ್ಥಿ ಯಾರು ಎನ್ನುವ ಕುರಿತು ಚರ್ಚೆ ಜೋರಾಗಿದ್ದು, ಮತ್ತೊಮ್ಮೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ವಿಚಾರದಲ್ಲೂ ಬಣ ರಾಜಕೀಯ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿದೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ಕೋಲಾರ ಕಾಂಗ್ರೆಸ್ ವಲಯದಲ್ಲಿ ಬಿರುಸಿನ ಚಟುವಟಿಕೆಗಳು ಆರಂಭಗೊಂಡಿದೆ. ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಇಂಗಿತವನ್ನು ಜ.9ರಂದು ಕೋಲಾರದಲ್ಲಿ ಘೋಷಣೆ ಮಾಡಿದ್ದರು. ಇದರ ಬೆನ್ನಲ್ಲೇ ಕೋಲಾರದಲ್ಲಿ ಸಿದ್ದು ಸ್ಪರ್ಧೆಗೆ ಪೂರ್ವ ತಯಾರಿಯನ್ನು ಮಾಡಲಾಯಿತು.
ವಾರ್ಡ್ ಸಭೆಗಳು, ಗ್ರಾಮಾಂತರ ಸಭೆಗಳು ಸೇರಿದಂತೆ ಒಂದಿಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ ಹೈಕಮಾಂಡ್ ಸಿದ್ದರಾಮಯ್ಯಗೆ ಕೋಲಾರ ಕ್ಷೇತ್ರ ಅಷ್ಟೊಂದು ಸೇಫ್ ಅಲ್ಲ, ವರುಣ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಸಲಹೆ ನೀಡಿದೆ ಎನ್ನಲಾಗಿದೆ.
ಇದರಿಂದ ಸಿದ್ದರಾಮಯ್ಯ ಕೋಲಾರದಿಂದ ಯೂಟರ್ನ್ ಹೊಡೆದ ಮೇಲೆ ಕೋಲಾರದ ಕಾಂಗ್ರೆಸ್ ವಲಯದಲ್ಲಿ ಸಿದ್ದು ಬದಲಿಗೆ ಯಾರು ಕಾಂಗ್ರೆಸ್ ಅಭ್ಯರ್ಥಿ ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ. ಇದರ ಜೊತೆಗೆ ಕೆ.ಹೆಚ್.ಮುನಿಯಪ್ಪ ಮತ್ತು ರಮೇಶ್ ಕುಮಾರ್ ಬಣಗಳು ತಮ್ಮ ಬೆಂಬಲಿತ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಿಸಲು ಮತ್ತೆ ಸಕ್ರಿಯವಾಗಿವೆ.