ಖಾಸಗಿ ಬ್ಯಾಂಕೊಂದರ ಲೆಕ್ಕವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಧಿಕಾರಿಯೋರ್ವನ ಮೇಲೆ ಬೈಕ್ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಬಳಿಯ ಸೂಲಿಬೆಲೆ ಎಂಬಲ್ಲಿ ನಡೆದಿದೆ.
ಅಕೌಂಟೆಂಟ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ವೀರೇಂದ್ರ ಗುಪ್ತಾ ಎಂಬ ವ್ಯಕ್ತಿಯ ಮೇಲೆ ಈ ಗುಂಡಿನ ದಾಳಿ ನಡೆಸಿದ್ದು, ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇನ್ನು ದಾಳಿಗೊಳಗಾದ ವ್ಯಕ್ತಿ ಬ್ಯಾಂಕ್ ಅಧಿಕಾರಿಯಾಗಿದ್ದರಿಂದ 7.5 ಲಕ್ಷ ರೂ ಗಳನ್ನು ತೆಗೆದುಕೊಂಡು ಬ್ಯಾಂಕಿಗೆ ಪಾವತಿಸಲೆಂದು ಹೊರಟಿದ್ದು, ಇದನ್ನರಿತ ದುಷ್ಕರ್ಮಿಗಳು ಹಣವನ್ನು ಎಸ್ಕೇಪ್ ಮಾಡುವ ದೃಷ್ಟಿಯಿಂದಲೇ ಈ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇನ್ನು ಹಣ ಏನಾಯಿತು ಅಥವಾ ಯಾರು ಕದ್ದರು ಎಂಬ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ಆದರೆ ಹಣ ಘಟನಾ ಸ್ಥಳದಲ್ಲಿರಲಿಲ್ಲ ಎಂದು ಪೊಲೀಸರು ಖಚಿತಪಡಿಸಿದ್ದಾರೆ ಎನ್ನಲಾಗಿದೆ.
ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿರುವ ಹೊಸಕೋಟೆ ಪೊಲೀಸರು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.