Publish Date: Tue, 01 Oct 2024 (19:52 IST)
Updated Date: Tue, 01 Oct 2024 (19:55 IST)
ಬೆಂಗಳೂರು: ಮುಡಾ ಹಗರಣವನ್ನು ಕೈಗೆತ್ತಿಕೊಂಡು ನಮ್ಮ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಬೆಂಗಳೂರಿನಿಂದ ಮೈಸೂರಿಗೆ ತೆರಳಿದ ಪಾದಯಾತ್ರೆಗೆ ಸಿಕ್ಕಿದ ಮೊದಲ ಜಯ ಇದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಅಭಿಪ್ರಾಯಪಟ್ಟರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯನವರು 40 ವರ್ಷಗಳ ರಾಜಕಾರಣದಲ್ಲಿ ನಾನೊಬ್ಬ ಪ್ರಾಮಾಣಿಕ, ನನಗೆ ಯಾವುದೇ ಕಪ್ಪು ಚುಕ್ಕಿ ಇಲ್ಲ ಎಂದು ಅವರಷ್ಟಕ್ಕೇ ಅವರು ಬಡಾಯಿ ಕೊಚ್ಚಿಕೊಳ್ಳುತ್ತಿದ್ದರು. ಪಾರದರ್ಶಕ ಆಡಳಿತ ಮಾಡಿದ್ದಾಗಿ ಹೇಳಿಕೊಳ್ಳುತ್ತಿದ್ದರು ಎಂದು ಟೀಕಿಸಿದರು.
ಪಾರದರ್ಶಕಕ್ಕಿಂತ ಪ್ರಾಮಾಣಿಕ ಆಡಳಿತ ಬಹಳ ಮುಖ್ಯ. ಪ್ರಾಮಾಣಿಕ ಆಡಳಿತದ ವಿಚಾರದಲ್ಲಿ ಸಿದ್ದರಾಮಯ್ಯನವರು ಸಂಪೂರ್ಣವಾಗಿ ವಿಫಲವಾಗಿದ್ದಾರೆ ಎಂದು ಆರೋಪಿಸಿದರು. 120 ವರ್ಷಗಳ ಹಳೆಯದಾದ ಕಾಂಗ್ರೆಸ್ ಪಾರ್ಟಿಯ ಮಾನ, ಮರ್ಯಾದೆ ಹಾದಿಬೀದಿಯಲ್ಲಿ ಹರಾಜಾಗುತ್ತಿದೆ. ಅದಕ್ಕೆ ಸಿದ್ದರಾಮಯ್ಯನವರು ಕಾರಣ ಎಂದು ಆಕ್ಷೇಪಿಸಿದರು.
ಸಿದ್ದರಾಮಯ್ಯನವರು ಪ್ರಾಮಾಣಿಕರಾಗಿದ್ದರೆ ರಾಜೀನಾಮೆ ಕೊಟ್ಟು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕಾಗಿತ್ತು. ಅವರು ಅಧಿಕಾರಕ್ಕೆ ಅಂಟಿಕೊಂಡು ಭಂಡತನ ಪ್ರದರ್ಶನ ಮಾಡಿದ್ದಾರೆ ಎಂದು ಟೀಕಿಸಿದರು. ಸ್ವಾತಂತ್ರ್ಯ ಬಂದ ಬಳಿಕ 75 ವರ್ಷಗಳ ದೇಶದ ಇತಿಹಾಸದಲ್ಲಿ ಈ ರೀತಿ ಗೌರವಾನ್ವಿತ ರಾಜ್ಯಪಾಲರ ಮೇಲೆ ಆಪಾದನೆ ಮಾಡಿದ ಯಾವ ಮುಖ್ಯಮಂತ್ರಿಯೂ ಇಲ್ಲ ಎಂದು ನುಡಿದರು.