ಮಹದಾಯಿ ನ್ಯಾಯಾಧಿಕರಣದಲ್ಲಿ ಕರ್ನಾಟಕಕ್ಕೆ ಹಿನ್ನೆಡೆ ಹಿನ್ನೆಲೆಯಲ್ಲಿ ಸಮಸ್ಯೆ ಪರಿಹಾರವಾಗದಿರಲು ಯುಪಿಎ ಸರಕಾರವೇ ನೇರ ಹೊಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಮಹದಾಯಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಯುಪಿಎ ಸರಕಾರ 3 ವರ್ಷಗಳ ಕಾಲ ನ್ಯಾಯಾಧಿಕರಣ ಸೌಲಭ್ಯವನ್ನೇ ನೀಡಿರಲಿಲ್ಲ ಎಂದು ತಿಳಿಸಿದರು.
ಮಹದಾಯಿ ನದಿ ನೀರು ಹಂಚಿಕೆ ವಿವಾದದಲ್ಲಿ ಬಿಜೆಪಿ ವಿರುದ್ಧ ಆರೋಪಿಸಲು ಕಾಂಗ್ರೆಸ್ ನಾಯಕರಿಗೆ ನೈತಿಕ ಹಕ್ಕಿಲ್ಲ. ಕೇಂದ್ರದಲ್ಲಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ವಿವಾದ ಬಗೆಹರಿಸಲು ಪ್ರಯತ್ನಿಸಿದ್ದರು. ಆದರೆ, ಯುಪಿಎ ಸರಕಾರ ಅಧಿಕಾರದಲ್ಲಿದ್ದಾಗ ಮಾತುಕತೆ ಮೂಲಕ ಪರಿಹಾರ ಅಸಾಧ್ಯ ಎಂದು ಮನಮೋಹನ್ ಸಿಂಗ್ ಅವರು ಸುಪ್ರೀಂ ಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದ್ದರು ಎಂದು ಹೇಳಿದರು.
ಮಹದಾಯಿ ನ್ಯಾಯಾಧಿಕರಣ ರಚಿಸಿದ್ದೂ ಮನಮೋಹನ್ ಸಿಂಗ್. ಈಗ ವಿವಾದ ಕುರಿತು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಮಾತನಾಡುತ್ತಿಲ್ಲ ಎಂದು ಯುಪಿಎ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಮಹದಾಯಿ ನದಿ ನೀರು ಹಂಚಿಕೆ ಕುರಿತು ವಿಪಕ್ಷಗಳ ಮನವೊಲಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದರು. ಆದರೆ, ಈಗ ಕಾಂಗ್ರೆಸ್ ಸದನದ ಒಳಗೂ ಹಾಗೂ ಹೊರಗೂ ಗೊಂದಲ ಸೃಷ್ಟಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು ಆರೋಪಿಸಿದರು.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ