Publish Date: Thu, 12 Oct 2023 (17:42 IST)
Updated Date: Thu, 12 Oct 2023 (19:42 IST)
ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಧಿಕ್ಕರಿಸಿದ್ದ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರವು, ರಾಜ್ಯ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚಿಸಿ ಅ.11ರಂದು ಆದೇಶ ಹೊರಡಿಸಿದೆ. ಶಿಕ್ಷಣ ತಜ್ಞ ಹಾಗೂ ಯುಜಿಸಿಯ ಮಾಜಿ ಅಧ್ಯಕ್ಷ ಪ್ರೊ.ಸುಖ್ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ 15 ಮಂದಿಯನ್ನೊಳಗೊಂಡ ಸಮಿತಿಯನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜೊತೆಗೆ 8 ಮಂದಿ ವಿಷಯ ತಜ್ಞರ ಹೆಸರನ್ನೂ ಕೂಡ ಸರ್ಕಾರ ಪ್ರಕಟಿಸಿದೆ. ಈಗ ನೇಮಿಸಿರುವ ಸಮಿತಿಯು 2024ರ ಫೆಬ್ರವರಿ 28ರೊಳಗೆ ರಾಜ್ಯ ಸರ್ಕಾರಕ್ಕೆ ವರದಿಯನ್ನು ಒಪ್ಪಿಸುವಂತೆ ನಿರ್ದೇಶನ ನೀಡಿದೆ. ಇನ್ನು ಈ ಸಮಿತಿಯು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ ಬೆಳೆಸುವ ಮತ್ತು ಅವರ ಮನೋವಿಕಾಸಕ್ಕೆ ಅಗತ್ಯವಾದ ಶಿಕ್ಷಣ ನೀಡಲು ಸೂಕ್ತ ಶಿಫಾರಸುಗಳನ್ನು ನೀಡಲಿದೆ ಎಂಬ ಭರವಸೆಯಿದೆ. ಕರ್ನಾಟಕ ರಾಜ್ಯ ಶಿಕ್ಷಣ ನೀತಿಯು ದೇಶಕ್ಕೆ ಮಾದರಿ ಶಿಕ್ಷಣ ನೀತಿಯಾಗಿ ಹೊರಹೊಮ್ಮಲಿ ಎಂದು ಹಾರೈಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.