Publish Date: Fri, 16 Feb 2024 (12:18 IST)
Updated Date: Fri, 16 Feb 2024 (12:22 IST)
ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅನಾರೋಗ್ಯಕ್ಕೀಡಾಗಿದ್ದಾರೆ. ಆದರೆ ಅವರ ಆರೋಗ್ಯದ ಬಗ್ಗೆ ಆತಂಕ ಬೇಕಿಲ್ಲ ಎಂದು ತಿಳಿದುಬಂದಿದೆ.
ಜ್ವರ ಮತ್ತು ಗಂಟಲು ನೋವಿನಿಂದ ಬಳಲುತ್ತಿರುವ ಎಚ್ ಡಿ ದೇವೇಗೌಡರನ್ನು ಗುರುವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ವೈದ್ಯರ ಸಲಹೆಯಂತೆ ಸದ್ಯಕ್ಕೆ ಆಸ್ಪತ್ರೆಯಲ್ಲೇ ಇದ್ದು ಚಿಕಿತ್ಸೆ ನೀಡಲಾಗುತ್ತಿದೆ. ಒಂದೆರಡು ದಿನದಲ್ಲಿ ಆರಾಮವಾಗಿ ಮತ್ತೆ ಮನೆಗೆ ಮರಳಲಿದ್ದಾರೆ ಎಂದು ತಿಳಿದುಬಂದಿದೆ.
ದೇವೇಗೌಡರ ಟ್ವಿಟರ್ ಖಾತೆಯಲ್ಲಿ ಆರೋಗ್ಯದ ಬಗ್ಗೆ ಮಾಹಿತಿ ನೀಡಲಾಗಿದೆ. ನನ್ನ ಆರೋಗ್ಯಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಕೆಲವು ಉತ್ಪ್ರೇಕ್ಷಿತ ವರದಿಗಳು ಬರುತ್ತಿವೆ. ನಾನು ದೈನಂದಿನ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ಶೀಘ್ರದಲ್ಲೇ ಹಿಂತಿರುಗುತ್ತೇನೆ, ಆತಂಕಪಡಬೇಕಿಲ್ಲ ಎಂದು ಬರೆದುಕೊಂಡಿದ್ದಾರೆ.
ಇತ್ತೀಚೆಗಷ್ಟೇ ದೇವೇಗೌಡರು ಸಂಸತ್ ಅಧಿವೇಶನದಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ್ದರು. ಅದಕ್ಕೆ ಮೊದಲು ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಸತತ ಓಡಾಟದಿಂದ ಬಳಲಿರುವ ಅವರು ಈಗ ಸ್ವಲ್ಪ ಮಟ್ಟಿಗೆ ಆರೋಗ್ಯ ಸಮಸ್ಯೆಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.