Publish Date: Sat, 25 Jun 2022 (14:32 IST)
Updated Date: Sat, 25 Jun 2022 (13:43 IST)
ಶಿವಮೊಗ್ಗ : ಮದುವೆಯಾಗಲು ಕುಜ ದೋಷ ಅಡ್ಡಿಯಾಗಿದ್ದರಿಂದ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಯುವತಿ ಸುಧಾ. ಭದ್ರಾವತಿ ತಾಲೂಕಿನ ಕಲ್ಲಾಪುರ ನಿವಾಸಿಯಾಗಿರುವ ಪೊಲೀಸ್ ಕಾನ್ಸ್ಟೇಬಲ್ ಸುಧಾ ಹಾಗೂ ಭದ್ರಾವತಿ ಅರಣ್ಯ ವಲಯದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬೆಳಗಾವಿ ಮೂಲದ ಪ್ರವೀಣ್ ಆರು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಪ್ರೀತಿಗೆ ಹೆತ್ತವರ ವಿರೋಧವಿತ್ತು.
ಆರಂಭದಲ್ಲಿ ಇವರಿಬ್ಬರ ಪ್ರೀತಿಗೆ ಜಾತಿ ಅಡ್ಡಿಯಾಗಿತ್ತು. ಜಾತಿ ಅಡ್ಡಿಯ ನಡುವೆಯೂ ಇಬ್ಬರು ಮದುವೆಗೆ ಸಿದ್ಧರಾಗಿದ್ದರು. ಆದರೆ ಪ್ರವೀಣ್ ತಾಯಿ ಯುವತಿಯ ಜಾತಕವನ್ನು ಜ್ಯೋತಿಷಿಯೊಬ್ಬರಿಗೆ ತೋರಿಸಿದ್ದರು.
ಜ್ಯೋತಿಷಿ ಈ ಯುವತಿಗೆ ಕುಜ ದೋಷ ಇದೆ. ಇವಳೊಂದಿಗೆ ವಿವಾಹವಾದರೆ ನಿಮ್ಮ ಮಗನ ಆಯಸ್ಸು ಕಡಿಮೆ ಎಂದಿದ್ದಾರೆ ಎನ್ನಲಾಗಿದೆ. ಹೀಗಾಗಿ ಕುಜ ದೋಷ ಇರುವ ಹುಡುಗಿ ಜೊತೆ ಮದುವೆ ಮಾಡಲು ಸಾಧ್ಯವಿಲ್ಲ ಎಂದು ಪ್ರವೀಣ್ ತಾಯಿ ತಿಳಿಸಿದ್ದರು.