Publish Date: Mon, 15 Apr 2024 (17:04 IST)
Updated Date: Mon, 15 Apr 2024 (17:08 IST)
ಶಿವಮೊಗ್ಗ: ಹೈವೋಲ್ಟ್ಜ್ ಲೋಕಸಭಾ ಕ್ಷೇತ್ರ ಎಂದು ಕರೆಸಿಕೊಂಡಿರುವ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇನ್ನೂ ಉರಿಬಿಸಿಲನ್ನೂ ಲೆಕ್ಕಿಸದೆ ಕಾಂಗ್ರೆಸ್ನ ಲಕ್ಷಕ್ಕೂ ಹೆಚ್ಚು ಬೆಂಬಲಿಗರೂ ಇವರಿಗೆ ಬೆಂಬಲ ಸೂಚಿಸಿ, ಕಾಂಗ್ರೆಸ್ ಶಕ್ತಿ ಪ್ರದರ್ಶಿಸಿದೆ.
ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪರ ಪುತ್ರಿ ಗೀತಾ ಶಿವರಾಜಕುಮಾರ್ ಅವರು ಬಿಜೆಪಿ ಸ್ಪರ್ಧಿ ಬಿ ವೈ ರಾಘವೇಂದ್ರ ಹಾಗೂ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ವಿರುದ್ಧ ಕಣಕ್ಕಿಳಿಯಲಿದ್ದಾರೆ.
ಇನ್ನು ಕಣದಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಮಕ್ಕಳು ಹಾಗೂ ಮಾಜಿ ಉಪಮುಖ್ಯಮಂತ್ರಿ ಸ್ಪರ್ಧಿಸುತ್ತಿರುವುದರಿಂದ ಈ ಕ್ಷೇತ್ರದಲ್ಲಿ ಪೈಪೋಟಿ ಹೆಚ್ಚಿದೆ. ಇಂದು ನಾಮಪತ್ರ ಸಲ್ಲಿಕೆಯಲ್ಲಿ ಕಾಂಗ್ರೆಸ್ ಮೆರವಣಿಗೆಯಲ್ಲಿ ಲಕ್ಷಕ್ಕೂ ಮಂದಿ ಉರಿಬಿಸಿಲನ್ನೂ ಲೆಕ್ಕಿಸದೆ ಗೀತಾ ಅವರಿಗೆ ಬೆಂಬಲ ಸೂಚಿಸಿದರು. ಈ ಮೂಲಕ ನಾಮಪತ್ರದ ವೇಳೆಯೇ ಕಾಂಗ್ರೆಸ್ ಶಕ್ತಿ ಪ್ರದರ್ಶನ ಮಾಡಿದೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಗುರುದತ್ ಹೆಗಡೆಯವರಿಗೆ ಗೀತಾ ಶಿವರಾಜಕುಮಾರ್ ಉಮೇದುವಾರಿಕೆ ಅರ್ಜಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅವರ ಪತಿ ನಟ ಶಿವರಾಜ್ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸೇರಿದಂತೆ ಇತರರಿದ್ದರು.