Publish Date: Mon, 11 Aug 2025 (16:29 IST)
Updated Date: Mon, 11 Aug 2025 (16:32 IST)
ಬೆಂಗಳೂರು: ಕರ್ನಾಟಕದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಆಹಾರ ಇಲಾಖೆ ಮತ್ತೆ ಶಾಕ್ ಕೊಡಲು ಮುಂದಾಗಿದೆ. ಈ ಬಗ್ಗೆ ಇಂದು ಆಹಾರ ಮತ್ತು ನಾಗರಿಕ ಪೂರೈಕಾ ಸಚಿವ ಕೆಎಚ್ ಮುನಿಯಪ್ಪ ಮಾಹಿತಿ ನೀಡಿದ್ದಾರೆ.
ಕೆಲವು ಸಮಯದ ಹಿಂದೆ ರಾಜ್ಯ ಸರ್ಕಾರ ಕೆಲವು ಮಾನದಂಡಗಳನ್ನಿಟ್ಟುಕೊಂಡು ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದುಗೊಳಿಸಿತ್ತು. ಇದು ಭಾರೀ ವಿವಾದಕ್ಕೂ ಗುರಿಯಾಗಿತ್ತು. ಬಿಪಿಎಲ್ ಕಾರ್ಡ್ ಪರಿಷ್ಕರಣೆಯಿಂದಾಗಿ ಕೆಲವು ಅರ್ಹ ಕಾರ್ಡ್ ಗಳೂ ರದ್ದಾಗಿದ್ದವು.
ಇಂದು ಸದನದಲ್ಲಿ ಸಚಿವ ಕೆಎಚ್ ಮುನಿಯಪ್ಪ ಮತ್ತೆ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸುಳಿವು ನೀಡಿದ್ದಾರೆ. ದಕ್ಷಿಣ ಭಾರತದಲ್ಲಿ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲೇ ಅತೀ ಹೆಚ್ಚು ಬಿಪಿಎಲ್ ಕಾರ್ಡ್ ದಾರರಿದ್ದಾರೆ. ಕರ್ನಾಟಕದಲ್ಲಿ ಇನ್ನೂ 1.28 ಕೋಟಿ ಬಿಪಿಎಲ್ ಕಾರ್ಡ್ ಗಳಿದ್ದು 4 ಕೋಟಿ ಫಲಾನುಭವಿಗಳಿದ್ದಾರೆ. ಅರ್ಹತೆಯಿಲ್ಲದವರೂ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಹೀಗಾಗಿ ಐದು ಕಠಿಣ ಮಾನದಂಡವನ್ನಿಟ್ಟುಕೊಂಡು ಮತ್ತೆ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಮಾಡಲಿದ್ದೇವೆ. ಅನರ್ಹರು ಬಿಪಿಎಲ್ ಕಾರ್ಡ್ ಹೊಂದಿರುವುದರಿಂದ ಅರ್ಹರು ವಂಚಿತರಾಗುತ್ತಿದ್ದಾರೆ. ಹೀಗಾಗಿ ಮತ್ತೆ ಪರಿಷ್ಕರಿಸಲಿದ್ದೇವೆ ಎಂದಿದ್ದಾರೆ.
ಪಡಿತರ ಕಾಳ ಸಂತೆಯಲ್ಲಿ ಮಾರಾಟವಾಗ್ತಿದೆ. ಇದಕ್ಕೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳುತ್ತಿದ್ದೇವೆ. ಅನೇಕ ಕಡೆ ಕೇಸ್ ಹಾಕಲಾಗಿದೆ. ಇನ್ನು ಕೆಲವು ಕಂಡೆ ದಂಡ ವಸೂಲಿ ಮಾಡಲಾಗಿದೆ ಎಂದು ಸದನದಲ್ಲಿ ಮಾಹಿತಿ ನೀಡಿದ್ದಾರೆ.