ಬೆಂಗಳೂರು: ನೂತನ ಉಪರಾಷ್ಟ್ರಪತಿಯಾಗಿ ಈಚೆಗೆ ಅಧಿಕಾರ ಸ್ವೀಕರಿಸಿದ ಸಿ.ಪಿ. ರಾಧಾಕೃಷ್ಣನ್ ಅವರು ಮೊದಲ ಬಾರಿ ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ. ಬೆಂಗಳೂರಿಗೆ ಬಂದು ಮೈಸೂರಿಗೆ ತೆರಳಿದ ರಾಧಾಕೃಷ್ಣನ್ ಅವರನ್ನು ಶಿಷ್ಟಾಚಾರದ ಪ್ರಕಾರ ಸ್ವಾಗತಿಸಲಾಯಿತು.
ಬೆಂಗಳೂರಿನ ವಿಮಾನ ನಿಲ್ದಾಣ ನಿಲ್ದಾಣಕ್ಕೆ ವಿಮಾನದಲ್ಲಿ ಬಂದ ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ವಾಗತಿಸಿದರು.
ನಂತರ ರಾಧಾಕೃಷ್ಣನ್ ಅವರು ವಾಯುಪಡೆಯ ಹೆಲಿಕಾಪ್ಟರ್ನಲ್ಲಿ ಮೈಸೂರಿನ ಮಂಡಕಳ್ಳಿ ವಿಮಾನನಿಲ್ದಾಣಕ್ಕೆ ಬಂದಿಳಿದರು. ರಾಜ್ಯಪಾಲ ಥಾವರಚಂದ್ ಗೆಹಲೋತ್, ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ದಕ್ಷಿಣ ವಲಯ ಡಿಐಜಿಪಿ ಡಾ.ಎಂ.ಬಿ. ಬೋರಲಿಂಗಯ್ಯ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ, ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಅವರನ್ನು ಸ್ವಾಗತಿಸಿದರು.
ಇದೇ ಮೊದಲ ಬಾರಿಗೆ ಮೈಸೂರಿಗೆ ನಗರಕ್ಕೆ ಭೇಟಿ ನೀಡಿರುವ ರಾಧಾಕೃಷ್ಣನ್ ಅವರು, ಶಿವರಾತ್ರೀಶ್ವರ ನಗರದಲ್ಲಿ ನಡೆಯಲಿರುವ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ (ಜೆಎಸ್ಎಸ್–ಎಎಚ್ಇಆರ್) 16ನೇ ಘಟಿಕೋತ್ಸವದಲ್ಲಿ ಪಾಲ್ಗೊಳ್ಳುವರು. ನಂತರ ಚಾಮುಂಡಿಬೆಟ್ಟದ ಪಾದದಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಆಶೀರ್ವಾದ ಪಡೆಯುವರು.
ಮಧ್ಯಾಹ್ನ 3ರ ಸುಮಾರಿಗೆ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವರು. ಅವರು ಭೇಟಿ ಕೊಡುತ್ತಿರುವ ಕಾರಣದಿಂದಾಗಿ, ಮಧ್ಯಾಹ್ನ 2ರಿಂದ ಸಂಜೆ 4ರವರೆಗೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.