Publish Date: Thu, 14 Jul 2022 (14:10 IST)
Updated Date: Thu, 14 Jul 2022 (14:37 IST)
ರಾಜ್ಯದ ಕೊಡಗು, ಚಿಕ್ಕಮಗಳೂರು, ಮಂಡ್ಯ ಕಲಬುರಗಿ, ಯಾದಗಿರಿ, ವಿಜಯಪುರ, ಬೆಳಗಾವಿ, ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ದೇಗುಲ, ಮಂಟಪಗಳು ಮುಳುಗಡೆಯಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಇಂದು ಕೊಂಚ ಕಡಿಮೆಯಾಗಿದ್ದರೂ ಮಂಗಳೂರಿಲ್ಲಿ, ಸಮುದ್ರ ತೀರದಲ್ಲಿ ನಿರಂತರ ಮಳೆ ಮುಂದುವರಿದಿದೆ.
ಮಲೆನಾಡು, ಕರಾವಳಿ, ಕೊಡಗು ಮಾತ್ರವಲ್ಲದೆ ಉತ್ತರ ಕರ್ನಾಟಕ ಭಾಗಗಳಲ್ಲಿ ತೀವ್ರ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಆಯಾ ಜಿಲ್ಲೆಗಳಲ್ಲಿನ ಪರಿಸ್ಥಿತಿ ನೋಡಿಕೊಂಡು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮಲೆನಾಡಿನಲ್ಲಿ ಮಹಾಮಳೆ ಮುಂದುವರಿದಿದ್ದು, ಕುಮದ್ವತಿ, ವರದಾ, ತುಂಗಭದ್ರಾ ನದಿಗಳು ತುಂಬಿಹರಿಯುತ್ತಿವೆ. ಮಹಾ ಪ್ರಳಯಕ್ಕೆ ಐತಿಹಾಸಿಕ ಮಂಟಪಗಳು ಮುಳುಗಿಹೋಗಿವೆ. ಕೊಪ್ಪಳ ಜಿಲ್ಲೆಯ ಗಂಗಾವತಿಯ ಶ್ರೀಕೃಷ್ಣದೇವರಾಯನ ಸಮಾಧಿ ಮಂಟಪ ಮುಳುಗಡೆಯಾಗಿದೆ. ಇಂದು ನಡೆಯಬೇಕಿದ್ದ ರಘುವರ್ಮ ಮಹೋತ್ಸವ ರದ್ದಾಗಿದೆ. ಐತಿಹಾಸಿಕ ಹಂಪಿಯ ಪುರಂದರ ಮಂಟಪ, ರಾಮಲಕ್ಷ್ಮಣ ದೇವಸ್ಥಾನ, ಚಕ್ರತೀರ್ಥ ಮಂಟಪ ಮುಳುಗಡೆಯಾಗಿದೆ. ಒಟ್ಟಿನಲ್ಲಿ ರಾಜ್ಯದಲ್ಲಿ 2018ರಲ್ಲಿ ಕಂಡ ಜಲಪ್ರಳಯ ಮತ್ತೆ ನೆನಪಿಸುತ್ತಿದೆ. ಪ್ರವಾಸಿಗರು ನೀರಿಗಿಳಿಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.