Publish Date: Thu, 29 Jul 2021 (15:00 IST)
Updated Date: Thu, 29 Jul 2021 (20:43 IST)
ಅಜ್ವಿನ್ ಸಿ ಹಾಗೂ ಬೈಕಂಪಾಡಿ ಜೋಕಟ್ಟೆಯ ಕೆಬಿಎಸ್ ಬೊಟ್ಟು ಹೌಸ್ ನಿವಾಸಿ ಹತೀಜಮ್ಮ ಅಲಿಯಾಸ್ ಸಫ್ನಾ ಬಂಧಿತ ಆರೋಪಿಗಳು.
ಉಳ್ಳಾಲದ ಅಪಾರ್ಟ್ಮೆಂಟ್ ನಿವಾಸಿ ಮಹಿಳೆ ಮತ್ತು ಆಕೆಯ ಸ್ನೇಹಿತ ಪಕ್ಕದ ಮನೆಯ ವ್ಯಕ್ತಿಯೊಬ್ಬರನ್ನು ಪಾರ್ಟಿಯ ನೆಪದಲ್ಲಿ ಕರೆದು ಮದ್ಯದ ಜತೆ ಅಮಲು ಪದಾರ್ಥ ಬೆರೆಸಿ ಕುಡಿಸಿ ನಂತರ ವಿವಸ್ತ್ರಗೊಳಿಸಿ ವೀಡಿಯೋ ಮಾಡಿದ್ದೂ ಅಲ್ಲದೇ ಆತನ ಮನೆಯಿಂದ 2.15 ಲಕ್ಷ ರೂ. ಹಾಗೂ ಉಂಗುರ ಕಳವು ಮಾಡಿದ್ದಾರೆ.
ಊರಿಗೆ ವಾಪಾಸಾಗಿದ್ದ ದುಬೈನಲ್ಲಿ ಉದ್ಯೋಗಿಯನ್ನು ಅಜ್ವಿನ್ ಹಾಗೂ ಆತನ ಗೆಳತಿ ಸಫ್ನಾ ಅಲಿಯಾಸ್ ಹತಿಜಮ್ಮ ಜುಲೈ 19ರಂದು ಪಾರ್ಟಿ ಮಾಡುವುದಾಗಿ ಹೇಳಿ ವ್ಯಕ್ತಿಗೆ ಮದ್ಯ ಕುಡಿಸಿದ್ದಾರೆ. ಮದ್ಯಕ್ಕೆ ಅಮಲು ಬರುವ ಪದಾರ್ಥವನ್ನು ಬೆರೆಸಿದ್ದರು. ವ್ಯಕ್ತಿ ಮೂರ್ಛೆ ಹೋದ ಬಳಿಕ ಆತನನ್ನು ವಿವಸ್ತ್ರಗೊಳಿಸಿ ಮನೆಯ ಕಪಾಟುವಿನಲ್ಲಿದ್ದ 2.12 ಲಕ್ಷ ರೂಪಾಯಿ ನಗದು ಹಾಗೂ ವ್ಯಕ್ತಿಯ ಕೈಯಲ್ಲಿದ್ದ ನವರತ್ನದ ಉಂಗುರವನ್ನು ಎಗರಿಸಿದ್ದರು.
ಮರುದಿನ ವಂಚನೆಗೊಳಗಾಗಿದ್ದ ವ್ಯಕ್ತಿ ಅಝ್ವೀನ್ ಮನೆಗೆ ಹೋಗಿ ಪೊಲೀಸ್ ಠಾಣೆಗೆ ದೂರು ನೀಡುವುದಾಗಿ ಹೇಳಿದ್ದಾರೆ. ಈ ಸಂದರ್ಭ ಆರೋಪಿಗಳು ಹಣವನ್ನು ನಾಳೆ ಕೊಡುವುದಾಗಿ ಹೇಳಿದ್ದಲ್ಲದೆ, ದೂರು ನೀಡದಂತೆ ನಂಬಿಸಿದ್ದರು. ಆದರೆ ಮತ್ತೆ ಆರೋಪಿಗಳು ಆ ವ್ಯಕ್ತಿಯ ಮನೆಗೆ ಹೋಗಿ, ಮೊಬೈಲ್ನಲ್ಲಿ ವೀಡಿಯೋ ಚಿತ್ರೀಕರಣವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವ ಬೆದರಿಕೆಯೊಡ್ಡಿದ್ದಾರೆ. ಮಾತ್ರವಲ್ಲದೆ ತನ್ನ ತಂಗಿಯ ಬಲಾತ್ಕಾರಕ್ಕೆ ಯತ್ನಿಸಿರುವುದಾಗಿ ಪ್ರಕರಣ ದಾಖಲಿಸುವುದಾಗಿಯೂ ಬೆದರಿಕೆಯೊಡ್ಡಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.