Publish Date: Sat, 22 Mar 2025 (18:41 IST)
Updated Date: Sat, 22 Mar 2025 (18:44 IST)
ಬೆಳಗಾವಿ: ಯಾವಾಗಲೂ ಘರ್ಜಿಸುವ ಹುಲಿಗಳನ್ನು ಟಾರ್ಗೇಟ್ ಮಾಡಿ, ಅವರನ್ನುಹನಿಟ್ರ್ಯಾಪ್ಗೆ ಒಳಪಡಿಸಿ, ಸಿಡಿಗಳನ್ನು ತೋರಿಸಿ ಹೆದರಿಸಲಾಗುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶನಿವಾರ ಹೇಳಿದ್ದಾರೆ.
ಈ ಮೂಲಕ ಅವರು ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ನಾಯಕರನ್ನು ಟಾರ್ಗೇಟ್ ಮಾಡಿ, ಅವರನ್ನು ಹನಿಟ್ರ್ಯಾಪ್ಗೆ ಬಳಸಿ ಅವರ ಬಾಯಿ ಮುಚ್ಚಲಾಗುತ್ತದೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ಸಚಿವ ರಾಜಣ್ಣ ಅವರೊಂದಿಗೆ ಚರ್ಚಿಸಿದ್ದೇನೆ. ಅವರು ಕಾನೂನು ಸಲಹೆ ಮತ್ತು ತಜ್ಞರ ಅಭಿಪ್ರಾಯ ಪಡೆದು ಪೊಲೀಸರಿಗೆ ದೂರು ನೀಡಬೇಕು ಎಂದರು.
ದೂರು ನೀಡಿದ ಬಳಿಕವಷ್ಟೇ ತನಿಖೆ ನಡೆಯಲಿದೆ. ಈ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯ ಇಲ್ಲ. ರಾಜ್ಯ ಪೊಲೀಸರೇ ಪ್ರಕರಣದ ತನಿಖೆ ನಡೆಸಿ, ಆರೋಪಿಗಳನ್ನು ಬಂಧಿಸಲು ಸಮರ್ಥರಾಗಿದ್ದಾರೆ ಎಂದು ಅವರು ತಿಳಿಸಿದರು.
ಹನಿಟ್ರ್ಯಾಪ್ ವಿಚಾರದಲ್ಲಿ ಯಾರೂ ಸಂಚು ಮಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ರಾಜಕೀಯಕ್ಕಾಗಿ ಮಾತ್ರವಲ್ಲ. ಬ್ಲ್ಯಾಕ್ ಮೇಲ್ ಮತ್ತು ವ್ಯಾಪಾರ ವಿಷಯವಾಗಿಯೂ ಹನಿಟ್ರ್ಯಾಪ್ ಮಾಡುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಸತೀಶ್ ಜಾರಕಿಹೊಳಿ ಉತ್ತರಿಸಿದರು.