Publish Date: Wed, 01 Jul 2026 (14:38 IST)
Updated Date: Wed, 01 Jul 2026 (14:42 IST)
ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ಹಣಸಿ ಗ್ರಾಮದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಕೇವಲ 29 ವರ್ಷದ ವಿವಾಹಿತ ಮಹಿಳೆಯನ್ನು ಆಕೆಯ ಪತಿಯೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯು ಸ್ಥಳೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.
ಕೊಲೆಯಾದ ದುರ್ದೈವಿ ಮಹಿಳೆಯನ್ನು ಪ್ರಿಯಾಂಕಾ ಕಮಲಾಕರ್ ಎಂದು ಗುರುತಿಸಲಾಗಿದೆ. ಆಕೆಯ ಪತಿ ಬಸವರಾಜ್ ವಡ್ಡರ್ ಎಂಬಾತನೇ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಕೊಲೆ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಪ್ರಿಯಾಂಕಾ ಮತ್ತು ಬಸವರಾಜ್ಗೆ 2024 ರಲ್ಲಿ ವಿವಾಹವಾಗಿತ್ತು. ಆರಂಭದಲ್ಲಿ ಇವರ ದಾಂಪತ್ಯ ಜೀವನ ಸುಗಮವಾಗಿಯೇ ಸಾಗುತ್ತಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಇಬ್ಬರ ನಡುವೆ ಪದೇ ಪದೇ ಜಗಳಗಳು ಶುರುವಾಗಿದ್ದವು. ಇದಕ್ಕೆ ಮುಖ್ಯ ಕಾರಣ, ಪತ್ನಿಯ ದೇಹದ ತೂಕ!
ಪ್ರಿಯಾಂಕಾ ದಪ್ಪಗಿದ್ದಾಳೆ ಎಂಬ ಕಾರಣಕ್ಕೆ ಪತಿ ಬಸವರಾಜ್ ಆಕೆಗೆ ನಿರಂತರವಾಗಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಅಲ್ಲದೆ, ಕುಟುಂಬ ಯೋಜನೆ ಮತ್ತು ಮಗು ಹೆರುವ ವಿಚಾರದಲ್ಲೂ ಇಬ್ಬರ ನಡುವೆ ತೀವ್ರ ಭಿನ್ನಾಭಿಪ್ರಾಯಗಳಿದ್ದವು. ಇದೇ ವಿಚಾರವಾಗಿ ಸೋಮವಾರ ರಾತ್ರಿ ಇಬ್ಬರ ನಡುವೆ ಜಗಳ ವಿಕೋಪಕ್ಕೆ ಹೋಗಿದ್ದು, ಆರೋಪಿ ಬಸವರಾಜ್ ಮನೆಯಲ್ಲೇ ಪತ್ನಿಯ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾನೆ.
ಘಟನೆ ನಡೆದ ಬಳಿಕ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಾರ್ಯಾಚರಣೆ ನಡೆಸಿ ಮುಖ್ಯ ಆರೋಪಿ ಬಸವರಾಜ್ ವಡ್ಡರ್ನನ್ನು ಬಂಧಿಸಿದ್ದಾರೆ. ಇದರೊಂದಿಗೆ ಈ ಕೃತ್ಯಕ್ಕೆ ಸಾಥ್ ನೀಡಿದ ಅಥವಾ ಪ್ರಚೋದನೆ ನೀಡಿದ ಆರೋಪದ ಮೇಲೆ ರೇಣವ್ವ, ಸುಭಾಷ್, ಮತ್ತು ಸಿದ್ದರಾಮೇಶ್ ಎಂಬ ಇನ್ನೂ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಸ್ತುತ ನಾಲ್ವರನ್ನೂ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ