ನವದೆಹಲಿ: ಭಾರೀ ಚರ್ಚೆಗೆ ಕಾರಣವಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಬಗ್ಗೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದಾರೆ.
ಬೇರೆ ರಾಜ್ಯಗಳ ಅಧ್ಯಕ್ಷರ ನೇಮಕದ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಕರ್ನಾಟಕದ ಬಗ್ಗೆ ಈವರೆಗೂ ಪ್ರಸ್ತಾಪ ಕೇಳಿ ಬಂದಿಲ್ಲ. ಈ ಬಗ್ಗೆ ಚರ್ಚಿಸಲು ನಾನು ದೆಹಲಿಗೆ ಬಂದಿಲ್ಲ, ನಾನು ಆ ರೇಸ್ನಲ್ಲಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿರುವ ಆರ್.ಅಶೋಕ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಭೇಟಿ ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲವನ್ನು ಮೂಡಿಸಿತು.
ರಾಜ್ಯಾಧ್ಯಕ್ಷ ಬದಲಾವಣೆ ಚರ್ಚೆ ಬೆನ್ನಲ್ಲೇ ವರಿಷ್ಠರನ್ನು ಭೇಟಿಯಾಗಿರುವುದು ಭಾರೀ ಕುತೂಹಲ ಮೂಡಿಸಿತ್ತು.
ದೆಹಲಿಯಲ್ಲಿ ಈ ಸಂಬಂಧ ಪ್ರತಿಕ್ರಿಯಿಸಿದ ಅವರು, ನಮ್ಮ ರಾಜ್ಯಾಧ್ಯಕ್ಷರ ಬಗ್ಗೆ ಚರ್ಚೆ ನಡೆದಿಲ್ಲ. ಆ ಬಗ್ಗೆ ಚರ್ಚಿಸಲು ನಾನು ಬಂದಿಲ್ಲ. ಪ್ರತಿ ಮೂರು ತಿಂಗಳಿಗೊಮ್ಮೆ ಬಂದು ರಾಜ್ಯದಲ್ಲಿ ನಡೆಯುವ ಬೆಳವಣಿಗೆ ಬಗ್ಗೆ ಮಾಹಿತಿ ನೀಡಲು ಸೂಚಿಸಿದ್ದರು. ಈ ಹಿನ್ನೆಲೆ ದೆಹಲಿಗೆ ಬಂದಿದ್ದು ಎಂದರು.