Select Your Language

Notifications

webdunia
webdunia
webdunia
webdunia

ನಾನು ತಪ್ಪು ಮಾಡಿಲ್ಲ; ನನಗೆ ನ್ಯಾಯಾಲಯದ ಮೇಲೆ ಸಂಪೂರ್ಣ ವಿಶ್ವಾಸವಿದೆ: ಡಿ.ಕೆ. ಶಿವಕುಮಾರ್

ನಾನು ತಪ್ಪು ಮಾಡಿಲ್ಲ; ನನಗೆ ನ್ಯಾಯಾಲಯದ ಮೇಲೆ ಸಂಪೂರ್ಣ ವಿಶ್ವಾಸವಿದೆ: ಡಿ.ಕೆ. ಶಿವಕುಮಾರ್
bengaluru , ಗುರುವಾರ, 26 ಮೇ 2022 (21:59 IST)
ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ಇದೊಂದು ರಾಜಕೀಯ ಷಡ್ಯಂತ್ರ. ಜಾರಿ ನಿರ್ದೇಶನಾಲಯ ನನ್ನ ವಿರುದ್ಧ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದೆ ಎಂಬ ಮಾಹಿತಿ ಮಾಧ್ಯಮಗಳ ಮೂಲಕ ತಿಳಿದಿದೆ. ಇದು ನನಗೆ ಹಾಗೂ ನ್ಯಾಯಾಲಯಕ್ಕೆ ಸಂಬಂಧಿಸಿದ ವಿಚಾರವಾಗಿದ್ದು, ನನಗೆ ನ್ಯಾಯಾಲಯದ ಮೇಲೆ ಸಂಪೂರ್ಣ ವಿಶ್ವಾಸವಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
 
ಸದಾಶಿವನಗರದಲ್ಲಿ ತಮ್ಮ ನಿವಾಸದ ಬಳಿ ಬುಧವಾರ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು, ‘ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ನನ್ನನ್ನು ಬಂಧಿಸಿದ 60 ದಿನಗಳ ಒಳಗಾಗಿ ಆರೋಪ ಪಟ್ಟಿ ಸಲ್ಲಿಸಬೇಕಿತ್ತು. ಅವರು ಸರಿಯಾದ ಸಮಯಕ್ಕೆ ಆರೋಪಪಟ್ಟಿ ಸಲ್ಲಿಸದ ಕಾರಣ ನನಗೆ ಜಾಮೀನು ದೊರೆತಿತ್ತು. ಆದರೆ ಮೂರು ವರ್ಷಗಳ ನಂತರ ಸಲ್ಲಿಸುತ್ತಿದ್ದಾರೆ. ನನಗೆ ಇನ್ನು ಅದರ ಪ್ರತಿ ಸಿಕ್ಕಿಲ್ಲ. ಅವರು ಹೊಸದಾಗಿ ಏನನ್ನೂ ಸೃಷ್ಟಿಸಲು ಸಾಧ್ಯವಿಲ್ಲ. ತೆರಿಗೆ ಇಲಾಖೆಯವರು ಕಾನೂನು ವಿರುದ್ಧವಾಗಿ ಸಾಕಷ್ಟು ಸೃಷ್ಟಿಸಿದ್ದಾರೆ. ಈಗ ಈ ವಿಚಾರ ನನ್ನ ಹಾಗೂ ನ್ಯಾಯಾಲಯದ ಮಧ್ಯೆ ಇದೆ. ನಾನು ಈ ನೆಲದ ಕಾನೂನನ್ನು ಗೌರವಿಸುತ್ತಿದ್ದು, ನ್ಯಾಯಾಂಗ ವ್ಯವಸ್ಥೆ ಮೇಲೆ ಸಂಪೂರ್ಣ ವಿಶ್ವಾಸ ಹೊಂದಿದ್ದೇನೆ. ಇದೊಂದು ರಾಜಕೀಯ ಷಡ್ಯಂತ್ರದ ಪ್ರಕರಣ. ಅಹ್ಮದ್ ಪಟೇಲ್ ಅವರ ರಾಜ್ಯಸಭೆ ಚುನಾವಣೆ ಸಂದರ್ಭದಲ್ಲಿ ಅವರಿಗೆ ಸಹಾಯ ಮಾಡಿದೆ ಎಂಬ ಕಾರಣಕ್ಕೆ ನನ್ನ ಹಾಗೂ ನನ್ನ ಸ್ನೇಹಿತರ ಮೇಲೆ ದಾಳಿ ಮಾಡಿ, ಅವರ ಹಣವನ್ನೂ ನನ್ನ ಹಣ ಎಂದು ಬರೆದಿದ್ದಾರೆ ಎಂದರು.
 
ನಾನು ಹುಟ್ಟಿನಿಂದ ರೈತ, ವೃತ್ತಿಯಲ್ಲಿ ಉದ್ಯಮಿ, ಆಯ್ಕೆಯಲ್ಲಿ ಶಿಕ್ಷಣಸ್ಥ, ಆಸಕ್ತಿಯಲ್ಲಿ ರಾಜಕಾರಣಿ ಎಂದು ಈಗಾಗಲೇ ಹೇಳಿದ್ದೇನೆ. ಆದರೆ ಬಿಜೆಪಿವರು ಅವರ ಪಕ್ಷದವರನ್ನೇ ಬಿಡುತ್ತಿಲ್ಲ, ಇನ್ನು ನನ್ನನ್ನು ಬಿಡುತ್ತಾರೆಯೇ? ಅವರ ರಾಜಕೀಯ ಹಾದಿಗೆ ಅಡ್ಡಿಯಾಗಿರುವವರನ್ನು ನಿರ್ಮೂಲನೆ ಮಾಡಲು ಹೊರಟಿದ್ದಾರೆ. ಅವರಿಗೆ ಶರಣಾಗಬೇಕು, ಇಲ್ಲದಿದ್ದರೆ ಅಂತಹವರನ್ನು ಮುಗಿಸಲು ಪ್ರಯತ್ನಿಸುತ್ತಾರೆ’ ಎಂದು ತಿಳಿಸಿದರು.
 
ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಪಿತೂರಿ ಮಾಡಲಾಗಿದೆಯೇ ಎಂಬ ಪ್ರಶ್ನೆಗೆ, ‘ಈ ವಿಚಾರ ನಿಮ್ಮೆಲ್ಲರಿಗೂ ತಿಳಿದಿದೆ. ಇದು ಬಿಜೆಪಿ ಸರ್ಕಾರದ ಕಾರ್ಯವೈಖರಿ. ಅವರು ಎಲ್ಲ ಸಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾ ಡಿಕೊಳ್ಳುತ್ತಿದ್ದಾರೆ. ಇನ್ನು ಬಿಜೆಪಿ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಿದೆ. ನಾನು ಪ್ರತಿ ವರ್ಷ ನನ್ನ ಆದಾಯ ತೆರಿಗೆ ವಿವರ ಸಲ್ಲಿಸುತ್ತಿದ್ದು, ಈ ಪ್ರಕರಣ ಸಿಬಿಐಗೆ ನೀಡುವ ಪ್ರಕರಣವಲ್ಲ ಎಂದು ಅಡ್ವೊಕೇಟ್ ಜನರಲ್ ಅವರೇ ಹೇಳಿದ್ದರೂ ಬಿಜೆಪಿ ಸರ್ಕಾರ ನನ್ನ ಪ್ರಕರಣವನ್ನು ಸಿಬಿಐಗೆ ನೀಡಿದೆ. ಅವರು ತಮ್ಮ ಬಳಿ ಇರುವ ಎಲ್ಲ ಅಸ್ತ್ರಗಳನ್ನು ಪ್ರಯೋಗ ಮಾಡುತ್ತಿದ್ದಾರೆ’ ಎಂದರು.
 
ಶಿವಕುಮಾರ್ ಅವರು ಮತ್ತೆ ಜೈಲಿಗೆ ಹೋಗಲಿದ್ದಾರೆ ಎಂದು ಅಶ್ವತ್ಥ್ ನಾರಾಯಣ ಹಾಗೂ ಸುನೀಲ್ ಕುಮಾರ್ ಅವರ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ನಾನು ಯಾರ ಹೇಳಿಕೆಗೂ ಪ್ರತಿಕ್ರಿಯೆ ನೀಡುವುದಿಲ್ಲ. ಅವರೆಲ್ಲರೂ ನನ್ನ ರಾಜಕೀಯದ ದೊಡ್ಡ ಸ್ನೇಹಿತರು. ಅವರೇ ಕೋರ್ಟ್, ನ್ಯಾಯಾಧೀಶರು, ತನಿಖಾಧಿಕಾರಿಗಳಾಗಿದ್ದಾರೆ. ಅವರು ಏನು ಮಾಡುತ್ತಾರೋ ಮಾಡಿಕೊಳ್ಳಲಿ. ಅವರಿಗೆ ಯಶಸ್ಸಾಗಲಿ’ ಎಂದರು.
 
ಇನ್ನು ಮುಸಲ್ಮಾನ ಹೆಣ್ಣುಮಕ್ಕಳು ಹಿಜಾಬ್ ಧರಿಸುತ್ತಿದ್ದಾರೆ ಎಂದು ಹಿಂದೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಮುಖ್ಯಮಂತ್ರಿಗಳು ದಾವೋಸ್ ನಲ್ಲಿ ಬಂಡವಾಳ ಹೂಡಿಕೆದಾರರನ್ನು ಸೆಳೆಯುತ್ತಿದ್ದಾರೆ. ಆದರೆ ಈ ಬೆಳವಣಿಗೆಗಳು ರಾಜ್ಯದ ಬಂಡವಾಳ ಹೂಡಿಕೆಗೆ ದೊಡ್ಡ ಪೆಟ್ಟು ನೀಡಲಿದೆ’ ಎಂದು ಉತ್ತರಿಸಿದರು.
 
ಇನ್ನು ಕೆಸಿಆರ್ ಅವರು ದೇವೇಗೌಡರನ್ನು ಭೇಟಿಯಾಗುತ್ತಿರುವ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಅವರು ರಾಜಕೀಯ ಪಕ್ಷದ ನಾಯಕರು. ಅವರ ರಾಜಕೀಯ ಉದ್ದೇಶಕ್ಕಾಗಿ ಪರಸ್ಪರ ಭೇಟಿಯಾಗುತ್ತಾರೆ. ಆ ವಿಚಾರವಾಗಿ ನಾನ್ಯಾಕೆ ಹೇಳಿಕೆ ನೀಡಬೇಕು? ಅದು ಅವರ ಹಕ್ಕು’ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಗೆ ಪರ್ಯಾಯ ರಾಜಕೀಯ ಶಕ್ತಿ ಕುರಿತು ವಿಜಯದಶಮಿಗೆ ನಿರ್ಧಾರ: ಕೆಸಿಎಆರ್/ಹೆಚ್‌ಡಿಕೆ