Select Your Language

Notifications

webdunia
webdunia
webdunia
webdunia

ನನಗೆ ಮತ್ತೆ ಲೋಕಾಯುಕ್ತರಾಗುವ ಆಸೆ....: ಸಂತೋಷ್ ಹೆಗ್ಗಡೆ

ನನಗೆ ಮತ್ತೆ ಲೋಕಾಯುಕ್ತರಾಗುವ ಆಸೆ....: ಸಂತೋಷ್ ಹೆಗ್ಗಡೆ
ಹಾವೇರಿ , ಸೋಮವಾರ, 6 ಜುಲೈ 2015 (12:51 IST)
ಲೋಕಾಯುಕ್ತ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಹಿನ್ನೆಲೆ ರಾಜ್ಯಾದ್ಯಂತ ಮುಖ್ಯ ಲೋಕಾಯುಕ್ತರ ರಾಜೀನಾಮೆಗೆ ಆಗ್ರಹ ಕೇಳಿ ಬರುತ್ತಿದ್ದು ಈ ಬಗ್ಗೆ ಮಾಜಿ ಮುಖ್ಯ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಗಡೆ ಪ್ರತಿಕ್ರಿಯಿಸಿದ್ದು, ಲೋಕಾಯುಕ್ತ ಸಂಸ್ಥೆ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ ಪ್ರಸ್ತುತದ ಪ್ರಕರಣವನ್ನು ಸಿಬಿಐಗೆ ವಹಿಸಿದಲ್ಲಿ ಮಾತ್ರ ನಿಜಾಂಶ ಹೊರ ಬರಲಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸರ್ಕಾರ ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕು. ಆಗ ಮಾತ್ರ ಸತ್ಯಾಂಶ ಹೊರ ಬರಲಿದೆ ಎಂದು ಆಗ್ರಹಿಸಿದ ಅವರು, ನನಗೆ ಲೋಕಾಯುಕ್ತ ಸಂಸ್ಥೆಯ ಬಗ್ಗೆ ಕೆಟ್ಟ ಅಭಿಪ್ರಾಯವಿಲ್ಲ. ಆದರೆ ಲೋಕಾಯುಕ್ತರನ್ನು ಆಯ್ಕೆ ಮಾಡುವಾಗ ಅವರ ಹಿನ್ನೆಲೆ ಕಾರ್ಯವೈಖರಿ ಹಾಗೂ ದಕ್ಷತೆಯ ಹಿನ್ನೆಲೆಯನ್ನು ಪರಿಶೀಲಿಸಿ ಆಯ್ಕೆ ಮಾಡಬೇಕು. ಅಲ್ಲದೆ ನನಗೆ ಮತ್ತೆ ಲೋಕಾಯುಕ್ತರಾಗುವ ಆಸೆ ಇಲ್ಲ ಎಂದು ಸ್ಪಷ್ಟಪಡಿಸಿದರು. 
 
ಇನ್ನು ಈ ಹಿಂದೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ್ದ ರಾಜ್ಯದ ಮಾಜಿ ಸಚಿವ ಎ.ಕೆ.ಸುಬ್ಬಯ್ಯ ಅವರು, ಪ್ರಸ್ತುತ ಲೋಕಾಯುಕ್ತರಾಗಿರುವ ಭಾಸ್ಕರ್ ರಾವ್ ಅವರ ಪರ ಮಾತನಾಡಿದ್ದರು. ಅಲ್ಲದೆ ಮಾಜಿ ಲೋಕಾಯುಕ್ತರಾಗಿರುವ ಸಂತೋಷ್ ಹೆಗ್ಗಡೆ ಅವರು ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗ್ಗಡೆ ಪರವಾಗಿ ವಕಾಲತ್ತು ವಹಿಸಿ ಅಂದಿನ ಭ್ರಷ್ಟರನ್ನು ರಕ್ಷಿಸಿದ್ದರು. ಆದ ಕಾರಣ ಸಂತೋಷ್ ಹೆಗ್ಗಡೆ ಅವರೂ ಕೂಡ ಓರ್ವ ಭ್ರಷ್ಟ ಲೋಕಾಯುಕ್ತ ಎಂದು ಟೀಕಿಸಿದ್ದರು. 
 
ಏನಿದು ಪ್ರಕರಣ?: 
ಲೋಕಾಯುಕ್ತ ಇಲಾಖೆಯ ಅಧಿಕಾರಿಗಳೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದು, ಒಂದು ಕೋಟಿ ಲಂಚ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ತನಿಖೆ ಮುಂದುವರಿಸಿದ್ದ ಬೆಂಗಳೂರು ಲೋಕಾಯುಕ್ತ ಎಸ್‌ಪಿ ಸೋನಿಯಾ ನಾರಂಗ್ ಅವರು ಈ ಪ್ರಕರಣದ ತನಿಖೆ ನಡೆಸುತ್ತಿದ್ದರು. ಆದರೆ ಅವರ ತನಿಖೆಗೆ ರಾಜ್ಯದ ಮುಖ್ಯ ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರು ತಡೆ ನೀಡಿ ಪ್ರಕರಣವನ್ನು ತಮ್ಮ ಸ್ವಂತ ಅಧಿಕಾರ ಬಳಸಿ ಸಿಸಿಬಿಗೆ ವಹಿಸಿದ್ದರು. 
 
ಈ ಸಂಬಂಧ ಪ್ರತಿಕ್ರಿಯಿಸಿದ್ದ ರಾಜ್ಯದ ಉಪ ಲೋಕಾಯುಕ್ತ ಸುಭಾಷ್ ಬಿ. ಅಡಿ ಅವರು, ಭ್ರಷ್ಟಾಚಾರದ ಪ್ರಕರಣಗಳನ್ನು ತನಿಖೆ ನಡೆಸುವ ಅಧಿಕಾರ ಸಿಸಿಬಿಗೆ ಇದೆಯೇ ಎಂಬ ಬಗ್ಗೆ ನನಗೆ ತಿಳಿದಿಲ್ಲ. ಆದರೆ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸುತ್ತಿರುವಾಗಿ ಮುಖ್ಯ ಲೋಕಾಯುಕ್ತರು ತಮ್ಮ ಬಳಿ ಸಲಹೆ ಪಡೆದಿಲ್ಲ ಎಂದು ಆರೋಪಿಸಿದ್ದರು. ಇದು ಲೋಕಾಯುಕ್ತ ಇಲಾಖೆ ಹಾಗೂ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಈ ಹಿನ್ನೆಲೆಯಲ್ಲಿ ಸ್ವಯಂ ನಿರ್ಧಾರ ಕೈಗೊಂಡಿದ್ದ ರಾಜ್ಯ ಸರ್ಕಾರ, ಪ್ರಸ್ತುತ ವಿಶೇಷ ತನಿಖಾ ತಂಡ ರಚಿಸಿ ತನಿಖೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಸಂತೋಷ್ ಹೆಗ್ಗಡೆ ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ.  
 
ಇನ್ನು ಪ್ರಕರಣದಲ್ಲಿ ಲೋಕಾಯುಕ್ತ ಇಲಾಖೆಯ ಜಂಟಿ ಆಯುಕ್ತ ರಿಯಾಜ್, ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಹಾಗೂ ಅವರ ಸಂಬಂಧಿ ಆಂಧ್ರ ಮೂಲದ ಕೃಷ್ಣ ರಾವ್ ಅಲಿಯಾಸ್ ನರಸಿಂಹ ರಾವ್ ಅವರು ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

Share this Story:

Follow Webdunia kannada