Publish Date: Fri, 26 Jan 2024 (20:24 IST)
Updated Date: Fri, 26 Jan 2024 (17:40 IST)
ಬೆಂಗಳೂರು : ಗುರುವಾರ ದೆಹಲಿಯಲ್ಲಿ ನಾನು ಕಾಂಗ್ರೆಸ್ ಪಕ್ಷದ ಸದಸ್ಯತ್ಯ ಹಾಗು ವಿಧಾನ ಪರಿಷತ್ ಸ್ಥಾನಕ್ಕೂ ರಾಜಿನಾಮೆ ಕೊಟ್ಟು ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ. ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದೇನೆ. ನನ್ನನ್ನು ಸೂಕ್ತ ಗೌರವದಿಂದ ನಡೆಸಿಕೊಳ್ಳುವುದಾಗಿ ಹೇಳಿದ್ದಾರೆ ಎಂದು ನುಡಿದ ಜಗದೀಶ್ ಶೆಟ್ಟರ್, ರಾಜ್ಯದಲ್ಲಿ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಮತ್ತಷ್ಟು ಶಕ್ತಿಯುತವಾಗಿ ಕಾರ್ಯ ನಿರ್ವಹಿಸಲಿದ್ದು, ಕಳೆದ ಬಾರಿಗಿಂತಲೂ ಹೆಚ್ಚಿನ ಲೋಕಸಭಾ ಸ್ಥಾನಗಳನ್ನು ಈ ಬಾರಿ ಗೆಲ್ಲುವುದು ಖಚಿತ ಎಂದರು.
ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನಡೆದ ಕೆಲವು ಘಟನೆಗಳಿಂದಾಗಿ ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೆ. ಆದರೆ ಇಂದು ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ಅವಶ್ಯಕತೆಯನ್ನು ಮನಗಂಡು ಮತ್ತೆ ಮಾತೃಪಕ್ಷಕ್ಕೆ ಮರಳುತ್ತಿದ್ದೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ಬಿಜೆಪಿಯ ಕಚೇರಿ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿಯನುದ್ದೇಶಿಸಿ ಮಾತನಾಡಿದ ಅವರು, ಅಯೋಧ್ಯೆಯ ರಾಮಮಂದಿರ ಹೋರಾಟದಲ್ಲಿ ನಾನು ಸಹ ಭಾಗಿಯಾಗಿದ್ದೆ. ಕರಸೇವಕನಾಗಿ ಕಾರ್ಯ ನಿರ್ವಹಿಸಿದ್ದಲ್ಲದೇ ಅಯೋಧ್ಯೆಯ ಮಂದಿರ ನಿರ್ಮಾಣಕ್ಕೆ ಹಣ ಸಂಗ್ರಹಣೆಯಲ್ಲಿಯೂ ತೊಡಗಿಕೊಂಡಿದ್ದೆ ಎಂದು ಸ್ಮರಿಸಿಕೊಂಡರು.
ಬಿಜೆಪಿ ರಿಪೇರಿ ಮಾಡಲಾಗದಷ್ಟು ಹದಗೆಟ್ಟಿದೆ ಎಂದು ಕಾಂಗ್ರೆಸ್ ಸೇರ್ಪಡೆ ಬಳಿಕ ಹೇಳಿದ್ದೀರಲ್ಲಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸಾಧ್ಯವಾಗದ ಕೆಲಸ ಯಾವುದೂ ಇಲ್ಲ. ಪ್ರತಿಯೊಬ್ಬರೂ ಈಗ ಹಿಂದಿನ ವೈಮನಸ್ಯಗಳನ್ನು ಮರೆತು ಒಮ್ಮತದಿಂದ ಕೆಲಸ ಮಾಡಲಿದ್ದೇವೆ ಎಂದರು.