ಯಾರು ಏನು ಬೇಕಾದರು ಹೇಳಲಿ, ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ನಾಗಮಂಗಲ ವಿಧಾನಸಭಾ ಕ್ಷೇತ್ರದಿಂದಲೇ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಜೆಡಿಎಸ್ ರೆಬಲ್ ಶಾಸಕ ಚೆಲುವರಾಯಸ್ವಾಮಿ ಹೇಳಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹಾಗೂ ನಾವು ಪರಸ್ಪರ ಉತ್ತರ-ದಕ್ಷಿಣ ಆಗಿರುವುದು ನಿಜ. ನಮ್ಮ ವಿರುದ್ಧ ಪ್ರವಾಸ ಮಾಡುವುದು ಹಾಗೂ ನಮ್ಮ ವಿರುದ್ಧ ರಾಜಕೀಯ ಹೆಜ್ಜೆ ಇಡುವುದು ಸಹಜ. ಅದರ ಬಗ್ಗೆ ಪ್ರತಿಕ್ರಿಯೆ ನೀಡುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಚುನಾವಣೆ ಎಂದ ಮೇಲೆ ಪ್ರತಿಸ್ಪರ್ಧಿಗಳು ಇರಲೇಬೇಕು. ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ ಮೇಲೆ ಮತ್ತೊಬ್ಬರು ಸ್ಪರ್ಧೆ ಮಾಡಲೇಬೇಕು. ಇದಕ್ಕೆ ಕ್ಷೇತ್ರದ ಜನ ತಕ್ಕ ಉತ್ತರ ನೀಡುತ್ತಾರೆ ಎಂದು ಮಾಜಿ ಶಾಸಕ ಶಿವರಾಮೇಗೌಡರ ಹೇಳಿಕೆಗೆ ತಿರುಗೇಟು ನೀಡಿದರು.
ಜೆಡಿಎಸ್ ಪಕ್ಷದಿಂದ ಅಮಾನತುಗೊಂಡಿರುವ 8 ಜನ ಶಾಸಕರು ಒಟ್ಟಾಗಿದ್ದೇವೆ. ಯಾವ ಪಕ್ಷಕ್ಕೆ ಹೋಗಬೇಕು ಎನ್ನುವ ಕುರಿತು ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದು ಜೆಡಿಎಸ್ ರೆಬಲ್ ಶಾಸಕ ಚೆಲುವರಾಯಸ್ವಾಮಿ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ