ಕಾರವಾರ: ಅಕ್ರಮ ಅದಿರು ಸಾಗಾಟ ಹಾಗೂ ಮಾರಾಟ ಪ್ರಕರಣದ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಶಾಸಕರಿಗೆ ನೀಡಲಾಗಿದ್ದ ಮಧ್ಯಂತರ ವೈದ್ಯಕೀಯ ಜಾಮೀನು ಅವಧಿಯನ್ನು ನ್ಯಾಯಾಲಯವು ನವೆಂಬರ್ 20ರ ವರೆಗೆ ವಿಸ್ತರಿಸಿ ಆದೇಶ ಹೊರಡಿಸಿದ್ದರಿಂದ, ಶಾಸಕರಿಗೆ ಕೊಂಚ ರಿಲೀಫ್ ಸಿಕ್ಕಿದೆ.
ನ್ಯಾಯಮೂರ್ತಿಗಳು ಈ ಕುರಿತು ಆದೇಶ ಹೊರಡಿಸಿದ್ದು, ಶಾಸಕರ ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸಲು ಅರ್ಹ ವೈದ್ಯರ ಹೆಸರನ್ನು ಸೂಚಿಸುವಂತೆ ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ನಿರ್ದೇಶನ ನೀಡಿದ್ದಾರೆ.
ಶಾಸಕ ಸತೀಶ್ ಸೈಲ್ ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ.
ವಿಶೇಷ ನ್ಯಾಯಾಲಯವು ಇತ್ತೀಚೆಗೆ ಶಾಸಕ ಸತೀಶ್ ಅವರು ತನಿಖೆಗೆ ಸಹಕರಿಸುತ್ತಿಲ್ಲ ಹಾಗೂ ಸೂಚಿಸಲಾದ ವೈದ್ಯಕೀಯ ಚಿಕಿತ್ಸೆಗೆ ಬದ್ಧರಾಗಿಲ್ಲ ಎಂಬ ಕಾರಣ ನೀಡಿ ಅವರ ವೈದ್ಯಕೀಯ ಜಾಮೀನನ್ನು ರದ್ದುಗೊಳಿಸಿ, ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು.
ಆದೇಶವನ್ನು ಪ್ರಶ್ನಿಸಿ ಸೈಲ್ ಅವರು ಹೈಕೋರ್ಟ್ಗೆ ಮೇಲ್ಮನವಿ ಸರ್ಜಿ ಸಲ್ಲಿಸಿದ್ದರು.
ನ್ಯಾಯಾಲಯವು ಅರ್ಜಿಯ ವಿಚಾರಣೆಯನ್ನು ನವೆಂಬರ್ 13ಕ್ಕೆ ಮುಂದೂಡಿದ್ದು, ಅಲ್ಲಿಯವರೆಗೆ ಮಧ್ಯಂತರ ಜಾಮೀನು ಮುಂದುವರೆಸಿತ್ತು. ಇದೀಗ ಮತ್ತೆ ಒಂದು ವಾರಗಳ ಕಾಲ ಜಾಮೀನು ವಿಸ್ತರಣೆ ಮಾಡಿ ಆದೇಶಿಸಿದೆ.