Select Your Language

Notifications

webdunia
webdunia
webdunia
webdunia

ಮೊಬೈಲ್ ನೆಟ್-ವರ್ಕ್ ಸಮಸ್ಯೆ ಪರಿಹಾರಕ್ಕೆ ಕ್ರಮ- ಸಚಿವ ಸುರೇಶ್ ಕುಮಾರ್

ಮೊಬೈಲ್ ನೆಟ್-ವರ್ಕ್ ಸಮಸ್ಯೆ ಪರಿಹಾರಕ್ಕೆ ಕ್ರಮ- ಸಚಿವ ಸುರೇಶ್ ಕುಮಾರ್
bengaluru , ಸೋಮವಾರ, 12 ಜುಲೈ 2021 (16:47 IST)
ಈಗಾಗಲೇ ರಾಜ್ಯದ ಮಾಹಿತಿ ತಂತ್ರಜ್ಞಾನ ಸಚಿವರೂ ಆದ ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ಮತ್ತು ಮುಖ್ಯ ಕಾರ್ಯದರ್ಶಿಯವರ ಸೂಚನೆಯಂತೆ ರಾಜ್ಯದಲ್ಲಿ ಮೊಬೈಲ್ ನೆಟ್-ವರ್ಕ್ ಪೂರೈಕೆದಾರ ಕಂಪನಿಗಳೊಂದಿಗೆ ಮಾಹಿತಿ ತಂತ್ರಜ್ಞಾನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿಯವರು ಚರ್ಚಿಸಿದ್ದು, ಅವರೆಲ್ಲಾ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಂದು ಈ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿಯವರು ಸಚಿವರ ಗಮನಕ್ಕೆ ತಂದಿದ್ದಾರೆ.
ಪ್ರಸ್ತುತ ಮಳೆಗಾಲವಾದ್ದರಿಂದ ರಾಜ್ಯದ ಮಲೆನಾಡು ಪ್ರದೇಶ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮೊಬೈಲ್ ನೆಟ್-ವರ್ಕ್ ಸಮಸ್ಯೆಯಿಂದಾಗಿ ಮಕ್ಕಳ  ಪರ್ಯಾಯ ಬೋಧನಾ ಕ್ರಮಗಳಾದ ಆನ್ಲೈನ್ ಬೋಧನಾ ಕ್ರಮ ಇಲ್ಲವೇ ದೂರದರ್ಶನ ಚಂದನಾ ಪಾಠಗಳಿಗೆ ತೊಂದರೆಯಾಗಿರುವುದರಿಂದ ಈ ಕುರಿತು ತ್ವರಿತವಾಗಿ ಗಮನ ಹರಿಸುವುದರ ಅಗತ್ಯವಿದ್ದು, ಮಕ್ಕಳ ಬೋಧನಾ ವಿಧಾನದ ಗುಣಮಟ್ಟವನ್ನು ಕಾಪಾಡಬೇಕಾಗಿದೆ ಎಂದು  ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕೊರೋನಾ ಕಾಲಘಟ್ಟದಂತಹ ಪರಿಸ್ಥಿತಿಯಲ್ಲಿ ಭೌತಿಕ ಶಾಲಾ ತರಗತಿಗಳು ಆರಂಭವಾಗುತ್ತಿರುವುದು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಪರ್ಯಾಯ ಬೋಧನಾ ಕ್ರಮಗಳನ್ನೇ ಅವಲಂಬಿಸಬೇಕಾಗಿದೆ, ಎಲ್ಲ ಮಕ್ಕಳಿಗೂ  ಉತ್ತಮ ಗುಣಮಟ್ಟದ ಬೋಧನೆ ದೊರಕಿಸಿಕೊಡುವ ನಿಟ್ಟಿನಲ್ಲಿ ನಾವು ಆನ್ಲೈನ್ ವ್ಯವಸ್ಥೆಯನ್ನೇ ನೆಚ್ಚಿಕೊಂಡಿರುವಂತಹ ಸಂದರ್ಭದಲ್ಲಿ ಮೊಬೈಲ್ ನೆಟ್-ವರ್ಕ್ನ್ನು ಬಲಪಡಿಸುವುದರಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೂ ಎಲ್ಲರಂತೆ ಶಿಕ್ಷಣ ದೊರೆತು ಕಲಿಕಾ ನಿರಂತರತೆಯಲ್ಲಿ ಅವರನ್ನು ತೊಡಗಿಸಬೇಕಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿಯವರೂ ಸಹ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದ್ದು, ಈ ನಿಟ್ಟಿನಲ್ಲಿ  ಯುದ್ಧೋಪಾದಿಯಲ್ಲಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದ್ದಾರೆಂದು  ಸುರೇಶ್ ಕುಮಾರ್ ತಿಳಿಸಿದ್ದಾರೆ.
ಗ್ರಾಮ ಪಂಚಾಯ್ತಿ ಗ್ರಂಥಾಲಯಗಳಲ್ಲಿ ಪಾಠ ವ್ಯವಸ್ಥೆ:
ಡಿಜಿಟಲ್ ಶಿಕ್ಷಣ  ಇಲ್ಲವೇ ಆನ್ಲೈನ್ನಂತಹ ಪರ್ಯಾಯ ವ್ಯವಸ್ಥೆಯ ಮೂಲಕವೇ ಪ್ರಸ್ತುತ ಪರಿಸ್ಥಿತಿಯಲ್ಲಿ ಮಕ್ಕಳನ್ನು ತಲುಪಬೇಕಾಗಿರುವ ಈ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯ್ತಿ ಗ್ರಂಥಾಲಯಗಳಲ್ಲಿಯೂ ಈ ಸೌಲಭ್ಯ ವಂಚಿತ ಮಕ್ಕಳಿಗೆ ಶಿಕ್ಷಣ ಒದಗಿಸಲು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಸಂಬಂಧದಲ್ಲಿ ಸೋಮವಾರ ಮುಖ್ಯಮಂತ್ರಿಗಳ ಸಲಹೆಗಾರರಾದ ಪ್ರಶಾಂತ್ ಪ್ರಕಾಶ್ ಮತ್ತು ರಾಜ್ಯ ಸರ್ಕಾರದ ಶೈಕ್ಷಣಿಕ ಸಲಹೆಗಾರರಾದ ಪ್ರೊ. ದೊರೆಸ್ವಾಮಿಯವರೊದಿಗೆ  ವಿಧಾನಸೌಧದ ತಮ್ಮ ಕಚೇರಿಯಲ್ಲಿ    ಚರ್ಚಿಸಿದ ಸಚಿವರು, ರಾಜ್ಯದಲ್ಲಿರುವ 5766 ಗ್ರಾಮಪಂಚಾಯ್ತಿ ಗ್ರಂಥಾಲಯಗಳನ್ನು ಬಳಸಿಕೊಂಡು ಅಲ್ಲಿ ಡಿವೈಸರ್ ಅಳವಡಿಸುವ ಮೂಲಕ ದೂರದರ್ಶನ ಇಲ್ಲವೇ ಮೊಬೈಲ್ ವಂಚಿತ ಮಕ್ಕಳಿಗೆ ಆನ್ಲೈನ್ ಶಿಕ್ಷಣ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಚರ್ಚಾ ಪ್ರಕ್ರಿಯೆಗಳು ಚಾಲನೆಯಲ್ಲಿವೆ ಎಂದು ತಿಳಿಸಿದ್ದಾರೆ. 
ಈ ಸಂಬಂಧದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಗ್ರಾಮೀಣ ಮಕ್ಕಳ ಶಿಕ್ಷಣ ಮುಂದುವರಿಕೆ ಮತ್ತು ಕಲಿಕಾ ನಿರಂತರತೆಗೆ  ಅನುಕೂಲವಾಗುವಂತಹ ಕ್ರಮಗಳನ್ನು ಕೈಗೊಳ್ಳಲು ಇಲಾಖೆ ಮುಂದಾಗಿದೆ ಎಂದು  ಸಚಿವರು ತಿಳಿಸಿದ್ದಾರೆ. 
ಶಾಲೆಗಳಲ್ಲಿನ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ ಉತ್ತಮಗೊಳಿಸುವುದು ಸೇರಿದಂತೆ ಪರಿಣಾಮಕಾರಿ ಶಿಕ್ಷಣ ವ್ಯವಸ್ಥೆ ರೂಪಿಸುವ ಕುರಿತಂತೆ  ಎಸ್ ಎಸ್ ಎಲ್ ಸಿ ಪರೀಕ್ಷಾವಧಿ ಮುಗಿದ ಕೂಡಲೇ ಆರ್.ಡಿ.ಪಿ.ಆರ್. ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಶಿಕ್ಷಣ ಇಲಾಖೆಯ ಟಾಸ್ಕ್ಫೋರ್ಸ್ ಈ ಎಲ್ಲ ಅಂಶಗಳನ್ನು ಅವಲೋಕಿಸಿ ಪ್ರಾಯೋಗಿಕ ಕ್ರಮಗಳ ಕುರಿತಂತೆ ಕ್ರಿಯಾಯೋಜನೆ ರೂಪಿಸಲಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು. 
ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ. ಅನ್ಬುಕುಮಾರ್ ಹಾಜರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಅನಧಿಕೃತ ಶೆಡ್​ ತೆರವುಗೊಳಿಸಿದ ಬಿಬಿಎಂಪಿ