Publish Date: Wed, 28 Sep 2022 (11:41 IST)
Updated Date: Wed, 28 Sep 2022 (11:48 IST)
ಕೋಲಾರ : ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮಯ ಹತ್ತಿರವಾಗುತ್ತಿದ್ದಂತೆ ರಾಜ್ಯದ ಆ ಒಬ್ಬ ಪ್ರಭಾವಿ ಮುಖಂಡ ಈ ಬಾರಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಅನ್ನೋ ಕುತೂಹಲ ಮೂರು ಪಕ್ಷದವರನ್ನು ಕಾಡುತ್ತಿದೆ.
ಈ ಎಲ್ಲಾ ಪ್ರಶ್ನೆಗಳಿಗೆ ಸದ್ಯ ಉತ್ತರ ಸಿಕ್ಕಿದ್ದು, ಆ ನಾಯಕ ಸ್ಪರ್ಧಿಸುವ ಕ್ಷೇತ್ರ ಬಹುತೇಕ ಫೈನಲ್ ಆಗಿದೆ. ಯಾರು ಆ ನಾಯಕ, ಯಾವುದು ಆಕ್ಷೇತ್ರ? ರಾಜ್ಯದ ಪ್ರಭಾವಿ ನಾಯಕರಲ್ಲಿ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡಾ ಒಬ್ಬರು,
ಇನ್ನೇನು ಮುಂದಿನ ವಿಧಾನಸಭೆ ಚುನಾವಣೆಗೆ ಹತ್ತಿರವಾಗುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ? ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಅನ್ನೋ ಹಲವು ಪ್ರಶ್ನೆಗಳು ರಾಜ್ಯದ ಪ್ರಮುಖ ಮೂರು ಪಕ್ಷಗಳ ನಾಯಕರನ್ನು ಹಾಗೂ ಕಾರ್ಯಕರ್ತರನ್ನು ಕಾಡುತ್ತಲೇ ಇತ್ತು.
ಕಳೆದ ಬಾರಿ ಬಾದಾಮಿ ಕ್ಷೇತ್ರದಿಂದ ಪ್ರಯಾಸದ ಗೆಲುವು ಸಾಧಿಸಿದ ಸಿದ್ದರಾಮಯ್ಯ, ಚಾಮುಂಡೇಶ್ವರಿ ಕ್ಷೇತ್ರ, ಹುಣಸೂರು, ಚಾಮರಾಜಪೇಟೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.