Publish Date: Tue, 06 Jun 2023 (12:00 IST)
Updated Date: Tue, 06 Jun 2023 (12:02 IST)
ಕೇಂದ್ರ ಸರಕಾರದ ವಿರುದ್ಧ ಮತ್ತೆ ಗುಡುಗಿದ್ದಾರೆ ನಟ ಕಿಶೋರ್. ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತದ ಬಗ್ಗೆ ಪೋಸ್ಟ್ ಮಾಡಿರುವ ಅವರು, ಇನ್ನೂರಕ್ಕೂ ಹೆಚ್ಚು ಜನರ ಸಾವಿಗೆ ನೇರವಾಗಿ ಕೇಂದ್ರ ಸರಕಾರವೇ ಹೊಣೆ ಎಂದು ಅವರು ಬಣ್ಣಿಸಿದ್ದಾರೆ.
ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ಇಂಗ್ಲಿಷ್ ಪತ್ರಿಕೆಯಲ್ಲಿ ಬಂದ ವರದಿಯನ್ನು ಪೋಸ್ಟ್ ಮಾಡಿ, ಅದರೊಂದಿಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದಾರೆ.
ರೈಲ್ವೆ ಮಂತ್ರಿ ಈಗ ಹೋಗಿ ನಿಂತು ಕ್ಯಾಮೆರಾ ಮುಂದೆ ಕಣ್ಣೀರು ಸುರಿಸುವ ನಾಟಕ ಬಿಟ್ಟು, ಇಂದಿಗೂ ಖಾಲಿಯಿರುವ 3 ಲಕ್ಷಕ್ಕೂ ಹೆಚ್ಚು ರೈಲ್ವೆ ನೌಕರರನ್ನು 1500ಕ್ಕೂ ಹೆಚ್ಚು ರೈಲ್ವೆ ಸುರಕ್ಷತೆಗೆ ಬೇಕಾದ ಖಾಲಿಯಾಗೇ ಉಳಿದಿರುವ ಹುದ್ದೆಗಳನ್ನು ತುಂಬಿ, ಹಳಿ ನಿರ್ವಹಣೆ ಸಮಪರ್ಕವಾಗಿಸಬಹುದಿತ್ತೆ? ಎಂದು ಕಿಶೋರ್ ಪ್ರಶ್ನೆ ಮಾಡಿದ್ದಾರೆ.
ಮುಂದುವರೆದು ಬರೆದಿರುವ ಕಿಶೋರ್, ಕೋಟ್ಯಂತರ ರೂಪಾಯಿ ವ್ಯಯಿಸಿ ತಿಂಗಳಿಗೊಂದು ರೈಲಿಗೆ ಹಸಿರು ನಿಶಾನೆ ತೋರಿಸಿ ಫೋಟೋ ಕ್ಲಿಕ್ಕಿಸಿಕೊಳ್ಳುವ ಬದಲು, ಕವಚ ತಂತ್ರಜ್ಞಾನಕ್ಕೆ ಪ್ರಾಮುಖ್ಯತೆ ಕೊಟ್ಟು ಎಲ್ಲೆಡೆ ಅಳವಡಿಸಬಹುದಿತ್ತೆ? ಹಾಗೆ ನೋಡಿದರೆ ಕಳೆದ ಆರೇಳು ವರ್ಷಗಳಲ್ಲಿ ಸಾವಿರಕ್ಕೂ ಹೆಚ್ಚು ರೈಲುಗಳು ಹಳಿತಪ್ಪಿ ಅಪಘಾತಕ್ಕೀಡಾಗಿದ್ದರೂ, 2021ರ ಸಿಎಜಿ ರಿಪೋರ್ಟನ್ನು ಕಡೆಗಣಿಸಿ, ಸುರಕ್ಷತೆಗಿಂತ ದೇಶದ ಸ್ವತ್ತನ್ನು ಮಾರಿ ದುಡ್ಡು ಮಾಡುವುದರಲ್ಲೇ ನಿರತವಾದ ಸರ್ಕಾರವೇ ಈ ದುರಂತಕ್ಕೆ ಕಾರಣವಲ್ಲವೆ? ಎಂದು ಪ್ರಶ್ನೆ ಮಾಡಿದ್ದಾರೆ.