ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಹೊಂದಾಣಿಕೆಯ ರಾಜಕೀಯ ಮಾಡುತ್ತಿವೆ ಎಂದು ವಿರೋಧಪಕ್ಷದ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ. ಕಾಂಗ್ರೆಸ್ ಕೇವಲ ಹೆಸರಿಗೆ ಮಾತ್ರ ಅಭ್ಯರ್ಥಿಯನ್ನು ಘೋಷಿಸಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಹೊಂದಾಣಿಕೆ ರಾಜಕೀಯ ಮಾಡುತ್ತಿವೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.
ಇದೇ ವೇಳೆ ಮಾತನಾಡಿದ ಅವರು ಕಾಂಗ್ರೆಸ್ನ ಈ ನಡುವಳಿಕೆಯಿಂದ ಕಾಂಗ್ರೆಸ್ ಅಭ್ಯರ್ಥಿ ಟಿ.ಈಶ್ವರ್ ಅವರು ಬಲಿಪಶುವಾಗಿದ್ದಾರೆ. ಮುಖ್ಯಮಂತ್ರಿಯವರ ವಿರುದ್ಧ ಸಾಕಷ್ಟು ಆರೋಪಗಳಿವೆ. ಈ ಆರೋಪಗಳನ್ನು ಮುಚ್ಚಿ ಹಾಕಲು ಭ್ರಷ್ಟಾಚಾರ ನಿಗ್ರಹ ದಳ ರಚನೆ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ರಾಜ್ಯಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪೊಲೀಸರ ಮೇಲೆ ನಡೆಯುತ್ತಿರುವ ನಿರಂತರ ದೌರ್ಜನ್ಯ, ಕಿರುಕುಳ, ಕೆಲಸದ ಒತ್ತಡ, ಮಿತಿ ಮೀರಿದ ದುಡಿಮೆ, ಕಡಿಮೆ ಸಂಬಳ, ಇಲಾಖೆಯಲ್ಲಿನ ವರ್ಗಾವಣೆ ದಂಧೆಯಿಂದ ಬೇಸತ್ತಿರುವ ಪೊಲೀಸರು ಪ್ರತಿಭಟನೆ ನಡೆಸಲು ಮುಂದಾಗಿದ್ದರೆ. ಬಿಜೆಪಿ ಪೊಲೀಸರ ಹೋರಾಟವನ್ನು ಬೆಂಬಲಿಸುತ್ತದೆ. ಪ್ರತಿಭಟನೆ ನಡೆಸದಂತೆ ರಾಜ್ಯಸರಕಾರ ಪೊಲೀಸರ ಬಳಿ ಮನವಿ ಮಾಡಿಕೊಳ್ಳಲಿ ಎಂದು ಸಲಹೆ ನೀಡಿದ್ದಾರೆ.