Publish Date: Sun, 10 Sep 2023 (10:30 IST)
Updated Date: Sun, 10 Sep 2023 (11:24 IST)
ಬೆಂಗಳೂರು : ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ ಬಗ್ಗೆ ಮೊದಲ ಬಾರಿಗೆ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಎಲ್ಲಾ ವಿಚಾರಗಳು ಆರಂಭಿಕ ಹಂತದಲ್ಲಿದೆ. ಈವರೆಗೂ ಕ್ಷೇತ್ರ ಹಂಚಿಕೆ ಬಗ್ಗೆ ಚರ್ಚೆ ನಡೆದಿಲ್ಲ. ಮುಂದೆ ಈ ಬಗ್ಗೆ ಹೇಳುತ್ತೇವೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮೈತ್ರಿಗೆ ಮಾಜಿ ಪ್ರಧಾನಿ ದೇವೇಗೌಡರು ಒಪ್ಪಿಗೆ ಸೂಚಿದ್ದಾರಾ ಎನ್ನುವ ಪ್ರಶ್ನೆಗೂ, ಕಾದು ನೋಡಿ ಎಂದಷ್ಟೇ ಉತ್ತರಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೈತ್ರಿ ಬಗ್ಗೆ ಮಾತನಾಡಿದ್ದಾರೆ. ಅವರಿಗೆ ನಾನು ಅಭಾರಿ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೈತ್ರಿಕೂಟದ ಬಗ್ಗೆ ಅವರು ಹೇಳಿದ್ದಾರೆ. ರಾಜ್ಯದ ಜನರನ್ನು ಲೂಟಿ ಮಾಡುತ್ತಿರುವವರಿಗೆ ಕಡಿವಾಣ ಹಾಕಬೇಕಿದೆ. 2006 ರಲ್ಲಿಯೂ ನಾನು ಬಿಜೆಪಿ ಜತೆ ಸೇರಿ ಸರ್ಕಾರ ಮಾಡಿದ್ದೆ ಎಂದಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೂರೇ ತಿಂಗಳಿಗೆ ಜನರು ರೋಸಿ ಹೋಗಿದ್ದಾರೆ. ಯಾವುದೇ ಸರ್ಕಾರಕ್ಕೆ ನಾಲ್ಕು ವರ್ಷ ಕಳೆದ ಮೇಲೆ ಆಡಳಿತ ವಿರೋಧಿ ಅಲೆ ಎದುರಾಗುತ್ತದೆ. ಆದರೆ ಈ ಸರ್ಕಾರ ಮೂರೇ ತಿಂಗಳಿಗೆ ಆಡಳಿತ ವಿರೋಧಿ ಅಲೆ ಎದುರಿಸುತ್ತಿದೆ. ಇಂಥ ಸರ್ಕಾರದ ವಿರುದ್ಧ ಸಂಘಟಿತವಾಗಿ ಹೋರಾಟ ನಡೆಸಬೇಕಿದೆ ಎಂದು ತಿಳಿಸಿದ್ದಾರೆ.