ಪ್ರತಿ ಬಾರಿಯಂತೆ ಈ ಬಾರಿ ಕೂಡಾ ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ವರಿಷ್ಠರು ಹೊರಗಡೆಯಿಂದ ಬಂದ ಉದ್ಯಮಿಗೆ ಮಣೆ ಹಾಕಿ ಟಿಕೆಟ್ ನೀಡುವ ಕಾಯಕ ಮುಂದುವರಿಸಿದ್ದರಿಂದ ಜೆಡಿಎಸ್ ಶಾಸಕರು ಅಸಮಧಾನಗೊಂಡಿದ್ದು, ಭಿನ್ನಮತ ಭುಗಿಲೆದ್ದಿದೆ ಎಂದು ಮಾಗಡಿ ಜೆಡಿಎಸ್ ಶಾಸಕ ಎಚ್.ಸಿ.ಬಾಲಕೃಷ್ಣ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಗಡಿ ಜೆಡಿಎಸ್ ಶಾಸಕ ಎಚ್.ಸಿ.ಬಾಲಕೃಷ್ಣ, ರಾಜ್ಯಸಭೆ ಚುನಾವಣೆಯಲ್ಲಿ ಹೊರಗಿನಿಂದ ಬಂದ ಟಿಕೆಟ್ ಆಕಾಂಕ್ಷಿಗಳನ್ನು ಮತ್ತು ಪಕ್ಷೇತರ ಶಾಸಕರನ್ನು ನಂಬಿ ತಮ್ಮ ಪಕ್ಷದ ಶಾಸಕರನ್ನು ಕಳೆದು ಕೊಂಡಿದ್ದಾರೆ. ಆದ್ದರಿಂದಲೇ ಜೆಡಿಎಸ್ ಪಕ್ಷ ಬೀದಿಪಾಲಾಗುವ ಹಂತಕ್ಕೆ ತಲುಪಿದೆ ಎಂದು ಲೇವಡಿ ಮಾಡಿದ್ದಾರೆ.
ನಾನು ಕಷ್ಟದಲ್ಲಿರುವ ಸಂದರ್ಭದಲ್ಲಿ ಶಾಸಕ ಜಮೀರ್ ಅಹ್ಮದ್ ಖಾನ್ ಆಶ್ರಯ ನೀಡಿದ್ದರಿಂದ ಅವರ ಪರವಾಗಿದ್ದೇನೆ. ಸಂಕಷ್ಟದಲ್ಲಿರುವಾಗ ಕುಮಾರಸ್ವಾಮಿಯವರ ಮನೆಗೆ ತೆರಳಿ ಸಹಾಯ ಯಾಚಿಸಿದ್ದೆ. ಆದರೆ, ಅವರು ನನಗೆ ಸಹಾಯ ಮಾಡಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಕಷ್ಟದ ಪರಿಸ್ಥಿತಿಯಲ್ಲಿ ಸಹಾಯ ಮಾಡಿದ ಜಮೀರ್ ಮತ್ತು ಚಲುವರಾಯಸ್ವಾಮಿ ಯಾವ ರೀತಿ ಆದೇಶ ನೀಡುತ್ತಾರೆಯೋ ಅದರಂತೆ ನಡೆದುಕೊಳ್ಳುವುದಾಗಿ ತಿಳಿಸಿದ್ದಾರೆ.
ರಾಜ್ಯಸಭೆ ಚುನಾವಣೆ ಅಭ್ಯರ್ಥಿಯಾಗಿ ಫಾರೂಕ್ ಅವರನ್ನು ಕಣಕ್ಕಿಳಿಸಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟವಾಗಿದೆ. ಪಕ್ಷದಲ್ಲಿ ಭಿನ್ನಮತ ಸ್ಫೋಟವಾಗಲು ಎಚ್.ಡಿ.ಕುಮಾರಸ್ವಾಮಿ ನೇರ ಹೊಣೆ ಎಂದು ಮಾಗಡಿ ಜೆಡಿಎಸ್ ಶಾಸಕ ಎಚ್.ಸಿ.ಬಾಲಕೃಷ್ಣ ಅಸಮಾಧಾನ ಹೊರಹಾಕಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ