Publish Date: Mon, 08 Aug 2016 (13:17 IST)
Updated Date: Mon, 08 Aug 2016 (13:19 IST)
ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹಾಗೂ ಸಿಎಂ ಆಪ್ತ ಕೆ.ಮರಿಗೌಡನನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವರಿಗೆ ಧಮ್ಕಿ ಹಾಕಿದ್ದ ಮರಿಗೌಡನನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದ್ದು, ಈ ಕುರಿತು ಮೈಸೂರು ಘಟಕಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಉಧ್ಯಮಿಯ ಮೇಲೆ ಕಾಂಗ್ರೆಸ್ ನಗರಾಧ್ಯಕ್ಷನಿಂದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನಿಯೇ ಇಲ್ಲ. ತನಿಖೆಯ ನಂತರ ಕಾನೂನು ಕ್ರಮ ಜರುಗಿಸಲಾಗುವುದು. ಯಾವ ಪಕ್ಷದವರಾಗಿದ್ದರೂ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಖಚಿತ ಎಂದು ತಿಳಿಸಿದರು.
ಮೈಸೂರು ನ್ಯಾಯಾಲಯದಲ್ಲಿ ಸಂಭವಿಸಿದ್ದ ನಿಗೂಢ ಸ್ಫೋಟದ ಹೊಣೆಯನ್ನು ಯಾವ ಸಂಘಟನೆಯು ಹೊತ್ತಿಲ್ಲ. ಈಗಾಗಲೇ ಸ್ಥಳಕ್ಕೆ ಎನ್ಐಎ ಹಾಗೂ ಗುಪ್ತಚರ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ತೆರಳಿದ್ದಾರೆ.
ಮೈಸೂರು ನ್ಯಾಯಾಲಯದಲ್ಲಿ ಸಂಭವಿಸಿದ್ದ ನಿಗೂಢ ಸ್ಫೋಟ ಮತ್ತು ಕೇರಳದ ಕೊಲ್ಲಂ ಆಂಧ್ರದ ಚಿತ್ತೂರು ಸ್ಫೋಟಗಳಿಗೂ ಸಾಮ್ಯತೆ ಇದೆ. ಪ್ರಕರಣ ಕುರಿತು ರಾಜ್ಯ ಪೊಲೀಸರೇ ತನಿಖೆ ನಡೆಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.