Select Your Language

Notifications

webdunia
webdunia
webdunia
webdunia

ಕಲಾಂ ಪಾರ್ಥಿವ ಶರೀರ ಮಧ್ಯಾಹ್ನದ ವೇಳೆಗೆ ದೆಹಲಿಗೆ ರವಾನೆ

ಕಲಾಂ ಪಾರ್ಥಿವ ಶರೀರ ಮಧ್ಯಾಹ್ನದ ವೇಳೆಗೆ ದೆಹಲಿಗೆ ರವಾನೆ
ನವದೆಹಲಿ , ಮಂಗಳವಾರ, 28 ಜುಲೈ 2015 (11:16 IST)
ಪಾಠ ಮಾಡುತ್ತಲೇ ಕೊನೆಯುಸಿರೆಳೆದಿದ್ದ ಮಾಜಿ ರಾಷ್ಟ್ರಪತಿ, ಭಾರತ ರತ್ನ ಪುರಸ್ಕೃತ, ಖ್ಯಾತ ವಿಜ್ಞಾನಿ ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಪಾರ್ಥಿವ ಶರೀರವನ್ನು ಇಂದು ರಾಷ್ಟ್ರ ರಾಜಧಾನಿ ದೆಹಲಿಗೆ ತರಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇತರೆ ಕೇಂದ್ರ ಸಂಪುಟ ಸಚಿವರು ಸ್ವೀಕರಿಸಲಿದ್ದಾರೆ. 
 
ಮೂಲಗಳ ಪ್ರಕಾರ, ವಿಶೇಷ ವಿಮಾನದಲ್ಲಿ ಅವರ ಪಾರ್ಥಿವ ಶರೀರವನ್ನು ದೆಹಲಿಗೆ ತರಲಾಗುತ್ತಿದ್ದು, ವಿಮಾನವು ಮಧ್ಯಾಹ್ನ 12.30ರ ವೇಳೆಗೆ ಆಗಮಿಸುವ ಸಾಧ್ಯತೆ ಇದೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಕೇಂಗ್ರ ಗೃಹ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹಾಗೂ ಮೂರೂ ಸೇನೆಗಳ ಮುಖ್ಯಸ್ಥರು ಪಾರ್ಥಿವ ಶರೀರವನ್ನು ಸ್ವೀಕರಿಸಿ ನಮನ ಸಲ್ಲಿಸಲಿದ್ದಾರೆ. ಬಳಿಕ ಮಧ್ಯಾಹ್ನ 3 ಗಂಟೆ ವರೆಗೆ ನಗರದ ಕಲಾ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕಿಡಲಾಗುವುದು. ಅಲ್ಲದೆ ಅಂತಿಮ ಸಂಸ್ಕಾರಕ್ಕಾಗಿ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆಗಳನ್ನು ರಕ್ಷಣಾ ಇಲಾಖೆ ಮಾಡಿಕೊಂಡಿದೆ ಎಂದು ಹೇಳಲಾಗಿದ್ದು, ತಮಿಳುನಾಡಿನ ರಾಮೇಶ್ವರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂಬುದಾಗಿ ಮೂಲಗಳು ತಿಳಿಸಿವೆ. 
 
2002ರಿಂದ 2007ರ ವರೆಗೆ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದ ಕಲಾಂ ಉತ್ತಮ ಸೇವೆ ಸಲ್ಲಿಸಿ ಜನ ನಾಯಕರಾಗಿ ಸಾರ್ವಜನಿಕರ ಮನದಲ್ಲಿ ಮನೆ ಮಾಡಿದ್ದರು. ಅಲ್ಲದೆ ವೈಜ್ಞಾನಿಕ ಕ್ಷೇತ್ರದಲ್ಲಿ ಮಹತ್ತರ ಸೇವೆಯನ್ನು ಸಲ್ಲಿಸಿದ್ದ ಅವರು, ಕ್ಷಿಪಣಿಯ ಜನಕ ಎಂಬ ಖ್ಯಾತಿ ಪಡೆದಿದ್ದರು. ಜೀವನದುದ್ದಕ್ಕೂ ಕೂಡ ಅವಿವಾಹಿತರಾಗಿಯೇ ಜೀವನ ಪೂರೈಸಿದ ಕಲಾಂ, ನಿನ್ನೆ ಮೆಘಾಲಯದ ಐಐಟಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದರು. ಆ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದರು. 

Share this Story:

Follow Webdunia kannada