Publish Date: Mon, 03 Mar 2025 (12:05 IST)
Updated Date: Mon, 03 Mar 2025 (12:07 IST)
ಬೆಂಗಳೂರು: ಗೌರವಾನ್ವಿತ ರಾಜ್ಯಪಾಲರು ಹಾಗೂ ರಾಜಭವನಕ್ಕೆ ಅಪಮಾನ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಇಂದು ಬಿಜೆಪಿ ವತಿಯಿಂದ ಪ್ರತಿಭಟನಾ ಪಾದಯಾತ್ರೆಯನ್ನು ಆಯೋಜಿಸಲಾಗಿತ್ತು. ಜೆಡಿಎಸ್ ಶಾಸಕರೂ ಇದರಲ್ಲಿ ಭಾಗವಹಿಸಿದ್ದರು.
ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಎಲ್ಲಾ ವಿಧಾನಸಭಾ ಸದಸ್ಯರು ಹಾಗೂ ವಿಧಾನ ಪರಿಷತ್ತಿನ ಸದಸ್ಯರು ಶಾಸಕರ ಭವನದಿಂದ ವಿಧಾನ ಸೌಧದ ವರೆಗೆ ಪಾದಯಾತ್ರೆ ನಡೆಸಿದರು.
ರಾಜ್ಯಪಾಲರ ಅಧಿಕಾರ ಹೈಕೋರ್ಟ್ ಎತ್ತಿಹಿಡಿದರೂ ಸಹಿಸದ ಕಾಂಗ್ರೆಸ್ಸಿಗೆ ಧಿಕ್ಕಾರವಿರಲಿ, ರಾಜ್ಯಪಾಲರ ಕುಲಾಧಿಪತಿ ಸ್ಥಾನಕ್ಕೆ ಕತ್ತರಿ ಹಾಕಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ, ರಾಜ್ಯಪಾಲರ ಸಾಂವಿಧಾನಿಕ ಹುದ್ದೆಗೆ ಕಳಂಕ ತಂದ ಮುಖ್ಯಮಂತ್ರಿಗಳಿಗೆ ಧಿಕ್ಕಾರವಿರಲಿ, ರಾಷ್ಟ್ರಪತಿ ಮತ್ತು ರಾಜ್ಯಪಾಲರು, ನ್ಯಾಯಾಲಯ, ಇಡಿ, ಸಿಬಿಐ ವಿರೋಧಿ ಕಾಂಗ್ರೆಸ್ಸಿಗೆ ಧಿಕ್ಕಾರ, ರಾಜ್ಯಪಾಲರ ಹೆಸರಲ್ಲಿ ನೀಚ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ- ಇವೇ ಮೊದಲಾದ ಭಿತ್ತಿಪತ್ರಗಳೊಂದಿಗೆ ವಿಧಾನಸಭಾ ಸದಸ್ಯರು ಹಾಗೂ ವಿಧಾನ ಪರಿಷತ್ತಿನ ಸದಸ್ಯರು ಪ್ರತಿಭಟನಾ ನಡಿಗೆಯಲ್ಲಿ ಭಾಗವಹಿಸಿದ್ದರು.