Publish Date: Wed, 01 Apr 2026 (15:56 IST)
Updated Date: Wed, 01 Apr 2026 (16:01 IST)
ಬೆಂಗಳೂರು: ಶಾಸಕ ಪ್ರದೀಪ್ ಈಶ್ವರ್ ಅವರು ಅವಹೇಳನಕಾರಿ ಮಾತನಾಡುತ್ತಿದ್ದು, ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಇಂದು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದೇವೆ ಎಂದು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ ಅವರು ತಿಳಿಸಿದ್ದಾರೆ.
ಸಿ.ಕೆ. ರಾಮಮೂರ್ತಿ, ಪಕ್ಷದ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ವಸಂತ್ ಕುಮಾರ್ ಅವರು ಇಂದು ಮಹಾರಾಣಿ ಕಾಲೇಜು ಸರ್ಕಲ್ ಬಳಿ ಇರುವ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿದರು.
ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪ ಚುನಾವಣೆ ನಡೆಯುತ್ತಿದೆ. ಪ್ರದೀಪ್ ಈಶ್ವರ್ ಒಬ್ಬ ಹುಚ್ಚ; ಅವರು ಬಿಜೆಪಿ ನಾಯಕರನ್ನು ಕೋತಿಗಳು, ಅಯೋಗ್ಯರೆಂದು ಸಂಬೋಧಿಸಿದ್ದಾರೆ. ಅವಹೇಳನಕಾರಿ ಮಾತನಾಡಿದ್ದಾರೆ. ಇವೆಲ್ಲ ಸಂವಿಧಾನವಿರೋಧಿ ಮತ್ತು ನೀತಿಸಂಹಿತೆಯನ್ನು ಉಲ್ಲಂಘಿಸಿವೆ ಎಂದು ಸಿ.ಕೆ. ರಾಮಮೂರ್ತಿ ಅವರು ಆಕ್ಷೇಪಿಸಿದರು. ಪ್ರದೀಪ್ ಈಶ್ವರ್ ಪ್ರಚೋದನೆ ಕೊಡುವಂತೆ ಮಾತನಾಡುತ್ತಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಹೋರಾಟ ರೂಪಿಸುವುದಾಗಿ ಪ್ರಶ್ನೆಗೆ ಉತ್ತರವಾಗಿ ತಿಳಿಸಿದರು.
ಎಸ್. ಹರೀಶ್ ಅವರು ಮಾತನಾಡಿ, ಬಾಗಲಕೋಟೆ ಉಪ ಚುನಾವಣೆ ವೇಳೆ ಶಿಕ್ಷಕರ ಸಂಘದ ಅಧ್ಯಕ್ಷ, ಸರಕಾರಿ ನೌಕರ ಚಂದ್ರು ನುಗ್ಲಿ ಅವರು ಮುಖ್ಯಮಂತ್ರಿಗಳು ಬಂದಾಗ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ಈಗಲೂ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಅವರನ್ನು ವಜಾ ಮಾಡುವಂತೆ ಆಗ್ರಹಿಸಿದರು. ಈ ಸಂಬಂಧ ಚುನಾವಣಾ ಅಧಿಕಾರಿಗಳಿಗೆ ದೂರು ಸಲ್ಲಿಸಿರುವುದಾಗಿ ಹೇಳಿದರು.
ಕಾಂಗ್ರೆಸ್, ಧರ್ಮದ ಆಧಾರದಲ್ಲಿ ಚುನಾವಣೆ ನಡೆಸುತ್ತಿದೆ. ಇದು ನೀತಿಸಂಹಿತೆಯ ಉಲ್ಲಂಘನೆ ಎಂದರು. ಪ್ರದೀಪ್ ಈಶ್ವರ್ ವಿರುದ್ಧ ಕ್ರಮ ಕೈಗೊಂಡು ಅವರನ್ನು ಅಲ್ಲಿಂದ ಹೊರಕ್ಕೆ ಕಳಿಸುವಂತೆ ಒತ್ತಾಯಿಸಿದ್ದೇವೆ ಎಂದು ಹೇಳಿದರು.