ಬೆಂಗಳೂರು: ಪಾಕಿಸ್ತಾನದ ಉಗ್ರರಿಗೆ ತಕ್ಕ ಪಾಠ ಕಲಿಸಲು ಭಾರತೀಯ ಸೇನೆ ಆರಂಭಿಸಿರುವ ಆಪರೇಷನ್ ಸಿಂಧೂರ್ ಯಶಸ್ವಿಯಾಗಲೆಂದು ಇಂದು ರಾಜ್ಯ ಬಿಜೆಪಿ ನಾಯಕರು ಪೂಜೆ ನೆರವೇರಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರ ದಿಟ್ಟ ನಿರ್ಧಾರದಿಂದ ಭಯೋತ್ಪಾದಕರನ್ನು ಮಟ್ಟ ಹಾಕುವ ಆಪರೇಷನ್ ಸಿಂಧೂರ್ ಪ್ರಾರಂಭವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.
ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ನಾವು, ನಮ್ಮ ಪಕ್ಷದ ಮುಖಂಡರು ಮಲ್ಲೇಶ್ವರದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿಯಲ್ಲಿ ಬಹಳ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದ್ದೇವೆ. ಭಯೋತ್ಪಾದಕರ ನೆಲೆಯನ್ನು ಬುಡಸಮೇತ ಕಿತ್ತು ಹಾಕುವ ದೃಢಸಂಕಲ್ಪದೊಂದಿಗೆ ಮೋದಿಜೀ ಇದನ್ನು ಆರಂಭಿಸಿದ್ದಾರೆ. ಭಾರತಕ್ಕೆ ಯಶಸ್ಸು ಸಿಗಲಿ; ಯೋಧರಿಗೆ ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿದ್ದೇವೆ ಎಂದು ತಿಳಿಸಿದರು.
ಜಗತ್ತು ಇವತ್ತು ಭಾರತದ ಕಡೆ ನೋಡುತ್ತಿದೆ. ಭಯೋತ್ಪಾದನೆಯು ಕೇವಲ ಭಾರತಕ್ಕೆ ಸೀಮಿತವಾಗಿಲ್ಲ; ಜಗತ್ತಿನ ಬೇರೆಬೇರೆ ದೇಶಗಳಲ್ಲೂ ಭಯೋತ್ಪಾದನೆಯು ದುಸ್ವಪ್ನದಂತೆ ಕಾಡುತ್ತಿದೆ. ಇದು ಅಂತ್ಯಗೊಳ್ಳಲಿ ಎಂದು ಪ್ರಾರ್ಥಿಸಿದ್ದಾಗಿ ತಿಳಿಸಿದರು.
ಇಂದು ಮತ್ತು ನಾಳೆ ರಾಜ್ಯದ ಎಲ್ಲ ಜಿಲ್ಲೆಗಳು, ತಾಲ್ಲೂಕುಗಳು, ಮಂಡಲಗಳಲ್ಲೂ ಕಾರ್ಯಕರ್ತರು ಪೂಜೆ ನೆರವೇರಿಸಲಿದ್ದಾರೆ ಎಂದು ಹೇಳಿದರು. ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ವಿಧಾನಪರಿಷತ್ ಮಾಜಿ ಸದಸ್ಯ ವೈ.ಎ. ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ನಿಕಟಪೂರ್ವ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.