Publish Date: Mon, 11 Aug 2025 (12:09 IST)
Updated Date: Mon, 11 Aug 2025 (12:12 IST)
ಬೆಂಗಳೂರು: ರಾಜ್ಯ ವಿಧಾನಮಂಡಲ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಅಧಿವೇಶನ ಆರಂಭಕ್ಕೆ ಮುನ್ನವೇ ವಿಪಕ್ಷ ಬಿಜೆಪಿ ಪ್ರತಿಭಟನೆ ನಡೆಸಿದೆ. ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗ ಪ್ರತಿಭಟನೆ ನಡೆಸಿದೆ.
ವಿಧಾನಮಂಡಲ ಅಧಿವೇಶನ ಆರಂಭಕ್ಕೆ ಮುನ್ನ ಇಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಸರ್ಕಾರದ ಬೇಜವಾಬ್ದಾರಿತನದಿಂದ 11 ಜನ ಅಮಾಯಕರ ಸಾವಿಗೆ ಕಾರಣವಾದ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಘಟನೆ ಖಂಡಿಸಿ ಇಂದು ಅಧಿವೇಶನಕ್ಕೂ ಮುನ್ನ ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ NDA ಮೈತ್ರಿಕೂಟದ ಶಾಸಕರೊಂದಿಗೆ ಪ್ರತಿಭಟನೆ ನಡೆಸಲಾಗಿದೆ. ರಾಜ್ಯ ಸರ್ಕಾರದ ಆಡಳಿತ ವೈಫಲ್ಯದಿಂದ ಬೆಂಗಳೂರಿನ ಐಪಿಎಲ್ ಸಂಭ್ರಮಾಚರಣೆಯ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ಪ್ರಚಾರದ ಗೀಳಿಗೆ 11 ಜನ ಅಮಾಯಕರನ್ನು ಬಲಿಪಡೆದಿದೆ ಎಂದು ಬಿಜೆಪಿ ಪ್ರತಿಭಟನೆ ನಡೆಸಿದೆ.
ಸದನದಲ್ಲೂ ಈ ವಿಚಾರವನ್ನು ಪ್ರಸ್ತಾಪಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ಇದಲ್ಲದೆ, ರಸಗೊಬ್ಬರ ಕೊರತೆ, ಜಾತಿಗಣತಿ ವಿಚಾರವನ್ನೂ ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಯೋಜನೆ ರೂಪಿಸಿದೆ.