Publish Date: Fri, 07 Mar 2025 (14:06 IST)
Updated Date: Fri, 07 Mar 2025 (14:08 IST)
ಬೆಂಗಳೂರು: ಕರ್ನಾಟಕ ಬಜೆಟ್ 2025 ರನ್ನು ಮಂಡಿಸಿರುವ ಸಿಎಂ ಸಿದ್ದರಾಮಯ್ಯ ಕೆಲಸ ಮಾಡುವ ಸ್ಥಳದಲ್ಲಿ ಕಾರ್ಮಿಕರು ಸಾವನ್ನಪ್ಪಿದರೆ ನೀಡಲಾಗುವ ಪರಿಹಾರ ಮೊತ್ತ ಏರಿಕೆ ಮಾಡಿರುವುದಾಗಿ ಘೋಷಣೆ ಮಾಡಿದ್ದಾರೆ.
ಸಿಎಂ ಬಜೆಟ್ ನಲ್ಲಿ ಕೃಷಿ, ಗ್ರಾಮೀಣಾಭಿವೃದ್ಧಿ ಜೊತೆಗೆ ಕಾರ್ಮಿಕರಿಗೂ ಕೊಡುಗೆ ನೀಡಲಾಗಿದೆ. ಈ ಬಜೆಟ್ ನಲ್ಲಿ ಕಾರ್ಮಿಕರು ಮತ್ತು ಕುಟುಂಬದವರ ರಕ್ಷಣೆಗಾಗಿ ಸಿಎಂ ಮಹತ್ವದ ಯೋಜನೆ ಘೋಷಣೆ ಮಾಡಿದ್ದಾರೆ.
ವಿಶೇಷವಾಗಿ ಕಟ್ಟಡ ಕಾರ್ಮಿಕರು ಮತ್ತು ಅವರ ಮಕ್ಕಳಿಗಾಗಿ ವಿಶೇಷ ಕೊಡುಗೆ ಘೋಷಣೆ ಮಾಡಿದ್ದಾರೆ. ಕಟ್ಟಡ ಕಾಮಗಾರಿ ಮಾಡುವಾಗ ಕಾರ್ಮಿಕರು ಸ್ಥಳದಲ್ಲೇ ಅಸುನೀಗಿದರೆ ಪರಿಹಾರ ಮೊತ್ತ ಹೆಚ್ಚಳ ಮಾಡಲಾಗಿದ್ದು ಇನ್ನು 8 ಲಕ್ಷ ರೂ. ಪರಿಹಾರ ಸಿಗಲಿದೆ.
ಇನ್ನು ಕಾರ್ಮಿಕರ ಮಕ್ಕಳಿಗಾಗಿಯೇ 6 ರಿಂದ 12 ನೇ ತರಗತಿಯವರೆಗಿನ ಶಾಲೆಗಳನ್ನು ನಿರ್ಮಿಸಿ ಅವುಗಳ ನಿರ್ವಹಣೆಯನ್ನು ಹಿಂದುಳಿದ ವರ್ಗಗಳ ಇಲಾಖೆಗೆ ಒಪ್ಪಿಸಲಾಗುವುದು ಎಂದು ಘೋಷಿಸಿದ್ದಾರೆ. ಅಲ್ಲದೆ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರಿಗೆ ಶೈಕ್ಷಣಿಕ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ವಿಸ್ತರಿಸುವುದಾಗಿ ಘೋಷಿಸಿದ್ದಾರೆ.