Publish Date: Tue, 04 Aug 2026 (09:32 IST)
Updated Date: Tue, 04 Aug 2026 (09:38 IST)
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ತೀವ್ರ ಅಸಮಾಧಾನದ ಹೊಗೆಯಾಡತೊಡಗಿದೆ. ಸಂಪುಟದಲ್ಲಿ ಸ್ಥಾನ ಸಿಗದಿರುವುದಕ್ಕೆ ಬೇಸರಗೊಂಡಿರುವ ಹಲವು ಹಿರಿಯ ಶಾಸಕರು ಹೈಕಮಾಂಡ್ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಬೆದರಿಕೆ ಒಡ್ಡಿದ್ದಾರೆ.
ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಹಾಗೂ ಸಾಗರ ಕ್ಷೇತ್ರದ ಶಾಸಕ ಬೆಳೂರು ಗೋಪಾಲಕೃಷ್ಣ ಸೇರಿದಂತೆ ಹಲವು ಮುಖಂಡರು ಸಂಪುಟದಿಂದ ಕೈಬಿಟ್ಟಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಯಶವಂತರಾಯಗೌಡ ಪಾಟೀಲ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿರುವುದಾಗಿ ತಿಳಿಸಿದ್ದರೆ, ಬೆಂಬಲಿಗರು ರಾಜ್ಯಾದ್ಯಂತ ಪ್ರತಿಭಟನೆಗೆ ಧುಮುಕಿದ್ದಾರೆ. ತನ್ವೀರ್ ಸೇಟ್, ಬಿ.ಜೆ. ಸಂಗಮೇಶ್ವರ್ ಮುಂತಾದ ಹಿರಿಯ ನಾಯಕರ ಬೆಂಬಲಿಗರೂ ಸಹ ತಮ್ಮ ನಾಯಕರಿಗೆ ಸಚಿವ ಸ್ಥಾನ ನೀಡಿಲ್ಲವೆಂದು ಆಕ್ರೋಶ ಹೊರಹಾಕಿದ್ದಾರೆ.
ಹೈಕಮಾಂಡ್ ತಕ್ಷಣದ ಮಧ್ಯಪ್ರವೇಶ
ಪಕ್ಷದಲ್ಲಿ ಸೃಷ್ಟಿಯಾಗಿರುವ ಈ ಬಂಡಾಯದ ವಾತಾವರಣ ಕಾಂಗ್ರೆಸ್ ಹೈಕಮಾಂಡ್ನ ನಿದ್ದೆಗೆಡಿಸಿದೆ. ಪರಿಸ್ಥಿತಿಯನ್ನು ತಿಳಿಗೊಳಿಸಲು ತಕ್ಷಣವೇ ರಂಗಕ್ಕಿಳಿದಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಬಿಕ್ಕಟ್ಟು ಶಮನಗೊಳಿಸುವ ಜವಾಬ್ದಾರಿಯನ್ನು ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ವಹಿಸಿದ್ದಾರೆ. ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸಿ, ಅವರ ದೂರುಗಳನ್ನು ಆಲಿಸಿ ಸಮಾಧಾನಪಡಿಸುವಂತೆ ಸೂಚನೆ ನೀಡಲಾಗಿದೆ.
ಕೆಪಿಸಿಸಿ ಕಚೇರಿ ಮುಂದೆ ಬ್ರಾಹ್ಮಣ ಸಮುದಾಯದ ಆಕ್ರೋಶ
ಸಂಪುಟದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ಮತ್ತು ಸಚಿವ ಸ್ಥಾನ ನೀಡಲಾಗಿಲ್ಲ ಎಂದು ಆರೋಪಿಸಿ, ಸಮುದಾಯದ ಮುಖಂಡರು ಹಾಗೂ ವಿವಿಧ ಸಂಘಟನೆಗಳು ಬೆಂಗಳೂರಿನ ಕೆಪಿಸಿಸಿ ಕಚೇರಿಯ ಮುಂದೆ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿವೆ.
ಮಹಿಳಾ ಪ್ರಾತಿನಿಧ್ಯದ ಕೊರತೆ
ಇನ್ನೊಂದೆಡೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಂಪುಟದಲ್ಲಿ ಯಾವುದೇ ಮಹಿಳಾ ಶಾಸಕರಿಗೆ ಸಚಿವ ಸ್ಥಾನ ನೀಡದಿರುವುದು ಸಾರ್ವಜನಿಕವಾಗಿ ಮತ್ತು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮಹಿಳಾ ನಾಯಕಿಯರನ್ನು ಕಡೆಗಣಿಸಲಾಗಿದೆ ಎಂಬ ಟೀಕೆಗಳು ಸರ್ಕಾರಕ್ಕೆ ನುಂಗಲಾರದ ತೂತಾಗಿ ಪರಿಣಮಿಸಿವೆ.
ಒಟ್ಟಾರೆಯಾಗಿ, ನೂತನ ಸಂಪುಟ ರಚನೆಯು ಕಾಂಗ್ರೆಸ್ ಪಕ್ಷಕ್ಕೆ ಒಂದು ಕಡೆ ಸಮಾಧಾನ ತಂದಿದ್ದರೆ, ಇನ್ನೊಂದೆಡೆ ಪ್ರಾಂತೀಯ ಹಾಗೂ ಜಾತೀಯ ಸಮತೋಲನ ಕಾಯ್ದುಕೊಳ್ಳುವಲ್ಲಿ ಉಂಟಾದ ವೈಫಲ್ಯವು ದೊಡ್ಡಮಟ್ಟದ ಬಂಡಾಯಕ್ಕೆ ದಾರಿ ಮಾಡಿಕೊಟ್ಟಿದೆ. ಈ ಹೈಡ್ರಾಮಾವನ್ನು ಕಾಂಗ್ರೆಸ್ ಹೈಕಮಾಂಡ್ ಹೇಗೆ ಶಮನಗೊಳಿಸಲಿದೆ ಎಂಬುದನ್ನು ಕಾದುನೋಡಬೇಕಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ