Publish Date: Thu, 18 Jul 2024 (09:32 IST)
Updated Date: Thu, 18 Jul 2024 (09:35 IST)
ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಅಬ್ಬರ ಇನ್ನೂ ಮುಂದುವರಿಯಲಿದೆ. ಈ ವಾರ ಮಳೆಯ ಅಬ್ಬರ ಕೊಂಚ ಕಡಿಮೆಯಾಗಬಹುದು ಎನ್ನಲಾಗಿತ್ತು. ಆದರೆ ಈಗ ಇನ್ನಷ್ಟು ದಿನ ಮಳೆ ಸುರಿಯಲಿದೆ ಎನ್ನುತ್ತಿದೆ ಹವಾಮಾನ ವರದಿ.
ಕರಾವಳಿ ಜಿಲ್ಲೆಯ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಈಗಾಗಲೇ ನದಿಗಳು ಉಕ್ಕಿ ಹರಿಯುತ್ತಿದ್ದು, ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಇದೆ. ಇದರ ನಡುವೆ ಈಗ ಲೇಟೆಸ್ಟ್ ಹವಾಮಾನ ವರದಿ ಪ್ರಕಾರ ಜುಲೈ 24 ರವರೆಗೂ ಮಳೆಯ ಅಬ್ಬರ ಮುಂದುವರಿಯಬಹುದು ಎಂದು ನಿರೀಕ್ಷಿಸಲಾಗಿದೆ.
ಉನ್ನರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಹಾಸನ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಯಚೂರು, ಚಿಕ್ಕಬಳ್ಳಾಪುರ, ಮಂಡ್ಯ, ಕೋಲಾರ, ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಳಲ್ಲೂ ಮಳೆಯಾಗುವ ನಿರೀಕ್ಷೆಯಿದೆ.
ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದೆ. ಆದರೆ ನಿರೀಕ್ಷಿಸಿದಷ್ಟು ಮಳೆಯಾಗುತ್ತಿಲ್ಲ ಎನ್ನುವುದು ವಿಪರ್ಯಾಸ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 26 ಡಿಗ್ರಿಯಷ್ಟಿದ್ದು ಕನಿಷ್ಠ ಉಷ್ಣಾಂಶ 18 ಡಿಗ್ರಿಯಷ್ಟಿದೆ. ಉತ್ತರ ಕನ್ನಡದಲ್ಲಿ ನೆರೆಯ ವಾತಾವರಣವಿದೆ. ಇನ್ನಷ್ಟು ದಿನ ಮಳೆ ಎಂದರೆ ಇನ್ನಷ್ಟು ಅನಾಹುತಗಳೂ ಗ್ಯಾರಂಟಿ ಎಂದಂತಾಯಿತು.