Publish Date: Thu, 14 Aug 2025 (08:32 IST)
Updated Date: Thu, 14 Aug 2025 (08:34 IST)
ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಒಂದು ವಾರದಿಂದ ವಿಪರೀತ ಮಳೆಯಾಗುತ್ತಿದೆ. ರಾಜ್ಯಾದ್ಯಂತ ಮಳೆ ಹೆಚ್ಚಾಗಲು ಕಾರಣವೇನು, ಎಲ್ಲಿಯವರೆಗೆ ಮಳೆಯಿರಲಿದೆ ಇಲ್ಲಿದೆ ಹವಾಮಾನ ವರದಿ.
ಇಷ್ಟು ದಿನ ಕೇವಲ ಕರಾವಳಿ ಭಾಗದಲ್ಲಿ ಮಾತ್ರ ಮಳೆಯ ಅಬ್ಬರವಿತ್ತು. ಆದರೆ ಒಂದು ವಾರದಿಂದ ರಾಜ್ಯ ರಾಜಧಾನಿ ಬೆಂಗಳೂರು, ಒಳನಾಡಿನಲ್ಲೂ ತೀವ್ರ ಮಳೆಯಾಗುತ್ತಿದೆ. ಆದರೆ ಕರಾವಳಿಯಲ್ಲಿ ಈ ವಾರ ಮಳೆಯ ಅಬ್ಬರ ತಕ್ಕಮಟ್ಟಿಗೆ ಕಡಿಮೆಯಾಗಿತ್ತು.
ಆದರೆ ಉಳಿದೆಡೆ ನಿರಂತರ ಮಳೆಯಾಗುತ್ತಿದೆ. ಆಗಸ್ಟ್ 13 ರವರೆಗೆ ಉತ್ತಮ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಲೇಟೆಸ್ಟ್ ಹವಾಮಾನ ವರದಿ ಪ್ರಕಾರ ಇಂದಿನಿಂದ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ. ಬೆಂಗಳೂರು ಮಾತ್ರವಲ್ಲದೆ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಯಾದಗಿರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ದಾವಣಗೆರೆ, ಶಿವಮೊಗ್ಗ, ತುಮಕೂರು, ವಿಜಯನಗರ, ಕೊಪ್ಪಳ, ರಾಯಚೂರು, ಚಿತ್ರದುರ್ಗ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಮಳೆಯ ಪ್ರಮಾಣ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ. ಮುಂದಿನ ಒಂದು ವಾರ ಕಾಲ ಮಳೆಯ ಅಬ್ಬರವಿರಲಿದೆ ಎಂದು ವರದಿಗಳು ಹೇಳುತ್ತಿವೆ.