ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಅಬ್ಬರಿಸುತ್ತಿದ್ದು, ವಾರಂತ್ಯಕ್ಕೆ ಕೆಲವು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಇನ್ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ಕರಾವಳಿ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುತ್ತಲೇ ಇದೆ. ಕಳೆದ ಒಂದು ವಾರದಿಂದಲೂ ಧಾರಾಕಾರ ಮಳೆ ಮುಂದುವರಿದಿದೆ. ಇಂದೂ ಕರಾವಳಿ ಜಿಲ್ಲೆಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಸೂಚನೆಯಿದೆ. ವಾರಂತ್ಯದ ಎರಡೂ ದಿನ ರಾಜ್ಯಾದ್ಯಂತ ಭಾರೀ ಮಳೆಯ ಸೂಚನೆಯಿದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸೂಚನೆಯಿದೆ. ನಾಳೆಯೂ ಭಾರೀ ಮಳೆ ಮುಂದುವರಿಯಲಿದೆ. ಹೀಗಾಗಿ ಕರಾವಳಿ ಪ್ರದೇಶದ ಜನ ಕಟ್ಟೆಚ್ಚರ ವಹಿಸುವುದು ಸೂಕ್ತವಾಗಿದೆ.
ವಿಶೇಷವೆಂದರೆ ಬೆಂಗಳೂರಿಗೂ ವಾರಂತ್ಯದಲ್ಲಿ ಭಾರೀ ಮಳೆಯಾಗುವ ಸೂಚನೆಯಿದೆ. ಇಂದು ಸಾಧಾರಣ ಮಳೆಯಾಗಲಿದ್ದರೆ ನಾಳೆ ಸಿಲಿಕಾನ್ ಸಿಟಿಯಲ್ಲಿ ಮಳೆಯ ತೀವ್ರತೆ ಹೆಚ್ಚಲಿದೆ ಎಂದು ತಿಳಿದುಬಂದಿದೆ. ಉಳಿದಂತೆ ಮೈಸೂರು, ತುಮಕೂರು, ಹಾಸನ, ಚಿತ್ರದುರ್ಗ, ಬಳ್ಳಾರಿ, ಹಾವೇರಿ, ರಾಯಚೂರು, ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಬಾಗಲಕೋಟೆ, ಕೊಪ್ಪಳ, ವಿಜಯಪುರ ಮುಂತಾದ ಜಿಲ್ಲೆಗಳಲ್ಲೂ ಇಂದು ಮತ್ತು ನಾಳೆ ಮಳೆಯ ಸೂಚನೆಯಿದೆ.