Publish Date: Fri, 20 Jun 2025 (08:20 IST)
Updated Date: Fri, 20 Jun 2025 (08:22 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಬಹುತೇಕ ಕಡೆ ಭಾರೀ ಮಳೆಯಾಗುತ್ತಿತ್ತು. ಆದರೆ ಈಗ ಮುಂದಿನ ಎರಡು ದಿನಗಳಿಗೆ ಮಹತ್ವದ ಬದಲಾವಣೆಯಾಗಲಿದೆ. ಏನದು ಇಲ್ಲಿದೆ ವಿವರ.
ದಕ್ಷಿಣ ಕನ್ನಡ, ಉಡುಪಿಯಲ್ಲಿ ಈ ಬಾರಿ ಅತೀ ಹೆಚ್ಚು ಮಳೆಯಾಗುತ್ತಿದೆ. ಮಂಗಳವಾರದವರೆಗೂ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಜೊತೆಗೆ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಲ್ಲೂ ಭಾರೀ ಮಳೆಯಾಗಿತ್ತು.
ಆದರೆ ಈಗ ಮಳೆಯ ಅಬ್ಬ ಕಡಿಮೆಯಾಗಿದೆ. ಕೊಡಗು, ಚಿಕ್ಕಮಗಳೂರಿನಲ್ಲಿ ಮಂಗಳವಾರದಿಂದಲೇ ಮಳೆಯ ಅಬ್ಬರ ಕಡಿಮೆಯಾಗಿತ್ತು. ದಕ್ಷಿಣ ಕನ್ನಡದಲ್ಲಿ ನಿನ್ನೆಯಿಂದ ಮಳೆ ಪ್ರಮಾಣ ಕಡಿಮೆಯಾಗಿದೆ. ಇಂದಿನಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಮಳೆ ಕಡಿಮೆಯಾಗಲಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದೂ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಉಳಿದಂತೆ ಮೈಸೂರು, ಮಂಡ್ಯ, ಕೋಲಾರ, ತುಮಕೂರು, ಹಾಸನ, ಚಾಮರಾಜನಗರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಉಳಿದೆಲ್ಲಾ ಜಿಲ್ಲೆಗಳಲ್ಲಿ ತುಂತುರು ಮಳೆ ಸಾಧ್ಯತೆಯಿದೆ ಎಂದು ಹವಾಮಾನ ವರದಿ ತಿಳಿಸಿದೆ. ಎರಡು ದಿನಗಳಿಗೆ ಈ ಹವಾಮಾನ ಮುಂದುವರಿಯಲಿದ್ದು, ಇದಾದ ಬಳಿಕ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಇಂದು ಗರಿಷ್ಠ ತಾಪಮಾನ 28 ಡಿಗ್ರಿ ಮತ್ತು ಕನಿಷ್ಠ 21 ಡಿಗ್ರಿಯಷ್ಟಿರಲಿದೆ.