Publish Date: Tue, 17 Jun 2025 (08:32 IST)
Updated Date: Tue, 17 Jun 2025 (08:34 IST)
ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಟ್ಟೂ ಬಿಡದೇ ಸುರಿಯುತ್ತಿರುವ ವರುಣ ಇಂದೂ ಕಾಡಲಿದ್ದಾನೆಯೇ? ಇಂದು ಮಳೆಯ ಪರಿಸ್ಥಿತಿ ಹೇಗಿರಲಿದೆ ಎಂಬ ಲೇಟೆಸ್ಟ್ ಹವಾಮಾನ ವರದಿ ಇಲ್ಲಿದೆ ನೋಡಿ.
ಕರಾವಳಿ ಜಿಲ್ಲೆಗಳು, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಕನ್ನಡದಲ್ಲಂತೂ ಪ್ರವಾಹ ಪರಿಸ್ಥಿತಿಯಿದೆ. ಇಂದೂ ಇದೇ ರೀತಿ ಮಳೆ ಮುಂದುವರಿಯಲಿದೆಯೇ?
ನಿನ್ನೆಗೆ ಹೋಲಿಸಿದರೆ ಕರಾವಳಿಯಲ್ಲಿ ಇಂದು ಮಳೆಯ ಅಬ್ಬರ ಕೊಂಚ ಮಟ್ಟಿಗೆ ಕಡಿಮೆಯಾಗಲಿದೆ. ಹಾಗಿದ್ದರೂ ಮಳೆ ಸಂಪೂರ್ಣ ನಿಲ್ಲಲ್ಲ. ಆದರೆ ಉಡುಪಿ, ಕೊಡಗು ಜಿಲ್ಲೆಯಲ್ಲಿ ಇಂದೂ ಭಾರೀ ಮಳೆಯಾಗಲಿದೆ. ಆದರೆ ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮಳೆಯ ಅಬ್ಬರ ಕೊಂಚ ಮಟ್ಟಿಗೆ ಕಡಿಮೆಯಾಗಲಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದೂ ದಿನವಿಡೀ ಮೋಡ ಕವಿದ ವಾತಾವರಣವಿರಲಿದೆ. ಉಳಿದಂತೆ ಮಂಡ್ಯ, ಮೈಸೂರು, ತುಮಕೂರು, ಕೋಲಾರ, ಹಾವೇರಿ, ರಾಯಚೂರು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ ಮುಂತಾದ ಜಿಲ್ಲೆಗಳಲ್ಲಿ ಸಣ್ಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳಿವೆ.