Publish Date: Thu, 03 Apr 2025 (12:36 IST)
Updated Date: Thu, 03 Apr 2025 (12:38 IST)
ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಈಗಾಗಲೇ ಸೂಚನೆ ನೀಡಿವೆ. ಅದರಂತೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಮಳೆ ಶುರುವಾಗಿದೆ.
ಇಂದು ಬೆಳಿಗ್ಗೆಯಿಂದಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿತ್ತು. ಇದೀಗ ಮಧ್ಯಾಹ್ನ 12 ರ ನಂತರ ದಟ್ಟ ಮೋಡ ಕವಿದ ವಾತಾವರಣವಿದ್ದು, ಭಾರೀ ಗಾಳಿ ಬೀಸಿದೆ. ಇದರಿಂದಾಗಿ ಜನ ಹೊರಗೆ ಓಡಾಡಲೂ ಆಗದ ಸ್ಥಿತಿಯಿದೆ. ಇದರ ಬೆನ್ನಲ್ಲೇ ಮಳೆ ಸುರಿಯಲಾರಂಭಿಸಿದೆ.
ಇಂದು ಬೆಂಗಳೂರು ಮಾತ್ರವಲ್ಲದೆ, ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ. ಕೆಲವು ಕಡೆ ಈಗಾಗಲೇ ಮಳೆ ಶುರುವಾಗಿದೆ. ನಿನ್ನೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಇಂದೂ ಅಲ್ಲಿ ಮಳೆಯಿರಲಿದೆ.
ಇದಲ್ಲದೆ, ಹಾಸನ, ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಕಲಬುರಗಿ, ಹಾವೇರಿ, ಬಳ್ಳಾರಿ, ರಾಯಚೂರು, ಬೀದರ್, ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ.