Publish Date: Fri, 24 May 2024 (10:04 IST)
Updated Date: Fri, 24 May 2024 (10:09 IST)
ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ ಒಂದು ವಾರ ಕಾಲ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿದೆ. ಆದರೆ ಬೆಂಗಳೂರಿನಲ್ಲಿ ಮೇ 25 ರ ನಂತರ ಮತ್ತೆ ತಾಪಮಾನ ಏರುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ಹೇಳುತ್ತಿದೆ.
ಹಾಸನ, ಕೊಡಗು, ಮೈಸೂರು, ಮಂಡ್ಯ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡಪಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲೂ ಇಂದು ಕೆಲವೆಡೆ ಸಣ್ಣ ಮಟ್ಟಿನ ಮಳೆಯಾಗುವ ಸಾಧ್ಯತೆಯಿದೆ. ಆದರೆ ಹವಾಮಾನ ವರದಿ ಪ್ರಕಾರ ನಾಳೆಯಿಂದ ನಾಲ್ಕೈದು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆ ಕಡಿಮೆಯಾಗಲಿದ್ದು, ಕೊಂಚ ಮಟ್ಟಿಗೆ ತಾಪಮಾನ ಏರಿಕೆಯಾಗಬಹುದು.
ಆದರೆ ಜೂನ್ ಮೊದಲ ವಾರದಿಂದ ಮತ್ತೆ ಬೆಂಗಳೂರಿನಲ್ಲಿ ಉತ್ತಮ ಮಳೆಯಾಗಲಿದೆ ಎಂದು ವರದಿಯಾಗಿದೆ. ಇಂದಿನ ಮಟ್ಟಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ನಿನ್ನೆ ಬೆಳಗಾವಿ, ಯಾದಗಿರಿ, ಬಾಗಲಕೋಟೆ ಮುಂತಾದೆಡೆ ಭಾರೀ ಮಳೆಯಾಗಿದೆ.
ಬೆಳಗಾವಿಯಲ್ಲಿ ನಿನ್ನೆ ಸಿಡಿಲಿಗೆ ಇಬ್ಬರು ಸಾವನ್ನಪ್ಪಿದ್ದಾರೆ. ಉಳಿದಂತೆ ನಾಲ್ವರ ಸ್ಥಿತಿ ಗಂಭೀರವಾಗಿದೆ. ಯಾದಗಿರಿಯಲ್ಲೂ ಮನೆ, ಆಸ್ತಿ ಪಾಸ್ತಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಹಲವೆಡೆ ಮರಗಳು ಧರೆಗುಳಿದಿದ್ದು, ತೋಟಗಾರಿಕಾ ಬೆಳೆಗಳಿಗೆ ಹಾನಿಯಾದ ಬಗ್ಗೆ ವರದಿಗಳಾಗಿವೆ.